ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷವು ಪಂಚಾಯತ್ ರಾಜ್ ವ್ಯವಸ್ಥೆಯಡಿ ಅಧಿಕಾರ ವಿಕೇಂದ್ರೀಕರಣದ ಪರವಾಗಿ ಇದೆ. ಕಾಂಗ್ರೆಸ್ ಪಕ್ಷ ಇಲ್ಲದಿದ್ದರೆ ಹೆಣ್ಣು ಮಕ್ಕಳು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿರಲಿಲ್ಲ. ಜನಸಾಮಾನ್ಯರು ಜನಪ್ರತಿನಿಧಿ ಗಳಾಗಲು ಅವಕಾಶವಾಗುತ್ತಿರಲಿಲ್ಲ ಎಂದು ಶಾಸಕ ಎಚ್.ಎನ್.ಶಿವಶಂಕರೆಡ್ಡಿ ಹೇಳಿದರು.
ನಗರದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷವು ಪಂಚಾಯರ್ ರಾಜ್ ವ್ಯವಸ್ಥೆ ಬಲಪಡಿಸುವ ಸಂಬಂಧ ಹಮ್ಮಿಕೊಂಡಿದ್ದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದರು.
ಇಂದಿನ ಸ್ಥಳೀಯ ಸಂಸ್ಥೆಗಳನ್ನು ಮತ್ತು ಅದರ ಪ್ರತಿನಿಧಿಗಳು ಅನುದಾನ ಹಂಚಿಕೊಳ್ಳುವುದರಲ್ಲಿಯೇ ತಲ್ಲೀನರಾಗಿದ್ದರೆ. ಇದು ಪಂಚಾಯಿತಿ ವ್ಯವಸ್ಥೆಗೆ ಮಾರಕ. ಜಿಲ್ಲಾ, ತಾಲ್ಲೂಕು ಪಂಚಾಯಿತಿ ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ವ್ಯಾಪಾರವಾಗುವರು.ಇಂತಹ ಬೆಳವಣಿಗೆಗಳನ್ನು ನೋಡಿದರೆ ಬೇಸರವಾಗುತ್ತದೆ ಎಂದು ಹೇಳಿದರು.
ಬದ್ಧತೆಯಿಂದ ಕೆಲಸ ಮಾಡುವವರ ಸಂಖ್ಯೆ ಕಡಿಮೆ ಆಗಿದೆ. ದುಡ್ಡು ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಅಧಿಕಾರ ವಿಕೇಂದ್ರೀಕರಣ ಸೇರಿದಂತೆ ಮಹತ್ವದ ಕೆಲಸಗಳು ಕಾಂಗ್ರೆಸ್ ಅವಧಿಯಲ್ಲಿ ಜಾರಿಯಾದವು. ಗ್ರಾಮೀಣ ಭಾಗಗಳ ಜನರ ಅಭಿವೃದ್ಧಿಗೆ ಕಾರಣವಾಗಿರುವ ನರೇಗಾ ಯೋಜನೆ ಸಹ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಜಾರಿ ಆಯಿತು ಎಂದರು.
ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಮಾತನಾಡಿ, ಪಂಚಾಯತ್ ರಾಜ್ ಸಂಘಟನೆಯನ್ನು ಬಲಪಡಿಸಲು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ಜನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಯಾವ ರೀತಿ ಅಧಿಕಾರ ಇದೆ ಎನ್ನುವುದು ಗೊತ್ತಿಲ್ಲ. ಇದರಿಂದ ಗ್ರಾಮ ಪಂಚಾಯಿತಿ ಹಂತದಲ್ಲಿ ಪಿಡಿಒಗಳು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ರಾಜ್ಯ ಉಪಾಧ್ಯಕ್ಷ ಡಿ.ಆರ್.ಪಾಟೀಲ್ ಮಾತನಾಡಿ, ‘ಗ್ರಾಮ ಪಂಚಾಯಿತಿಯಿಂದ ಹಿಡಿದು ಜಿಲ್ಲಾ ಪಂಚಾಯಿತಿಯವರೆಗೆ ಎಲ್ಲ ಜಾತಿ, ವರ್ಗದ ಜನರಿಗೆ ಅಧಿಕಾರ ಹಿಡಿಯುವ ಅವಕಾಶ ದೊರೆತಿದೆ. ಇದಕ್ಕೆ ರಾಜೀವ್ ಗಾಂಧಿ ಮತ್ತು ಪಿ.ವಿ.ನರಸಿಂಹರಾವ್ ಕಾರಣ. ಅವರಿಗೆ ಕೃತಜ್ಞರಾಗಿರಬೇಕು ಎಂದು ಹೇಳಿದರು.
ಎಲ್ಲ ಜಾತಿ ಜನರಿಗೆ ಅಧಿಕಾರ ದೊರೆಯಲು ಕಾರಣವಾದ ಕಾಂಗ್ರೆಸ್ ಪಕ್ಷಕ್ಕೆ ಕೃತಜ್ಞರಾಗಿರಬೇಕು. ಆದರೆ ಅದು ಆಗುತ್ತಿಲ್ಲ ಎಂದರು.
ಮಾಜಿ ಸಂಸದ ಹಾಗೂ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಪರಿಷತ್ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮಾತನಾಡಿದರು.
ಶಾಸಕ ವಿ.ಮುನಿಯಪ್ಪ, ಮಾಜಿ ಶಾಸಕ ಸಂಪಂಗಿ, ಎಸ್.ಎಂ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮುಖಂಡರಾದ ಆಂಜಿನಪ್ಪ, ಜಿ.ಎಚ್.ನಾಗರಾಜ್, ಯಲುವಳ್ಳಿ ರಮೇಶ್, ಸುಮಿತ್ರಮ್ಮ, ರಘು, ಮಮತಾ ಮೂರ್ತಿ ಇದ್ದರು.