ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಪೋಷಕರ ಕನಸುಗಳನ್ನು ಸಾಕಾರಗೊಳಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜತೆಗೆ ವಿಜ್ಞಾನ, ಸಾಂಸ್ಕೃತಿಕ, ಇತಿಹಾಸವನ್ನು ಪ್ರತಿಯೊಬ್ಬರು ಅಧ್ಯಯನ ಮಾಡಬೇಕು ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ತಿಳಿಸಿದರು.
ಅಗಲಗುರ್ಕಿಯ ಬಿಜಿಎಸ್ ಪಿ.ಯು. ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಎಸ್.ಬಿ.ಜಿ.ಎನ್.ಎಸ್. ಗ್ರಾಮಾಂತರ ಪಿ.ಯು. ಕಾಲೇಜು ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಭವಿಷ್ಯದ ದಿಕ್ಸೂಚಿಯಾಗಿದೆ ಎಂದರು.
ಸಾಂಸ್ಕೃತಿಕ ವೇದಿಕೆಯಿಂದ ನಾಯಕತ್ವ ಗುಣ ಬೆಳೆಯಲು ಸಾಧ್ಯ. ದೇಶದ ಕಲೆ, ಸಂಸ್ಕೃತಿಗೆ ಪೂರಕವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಕಲಿಯಬೇಕಿದೆ. ವಿದ್ಯೆಯು ಜ್ಞಾನ ಬೆಳೆಸುವುದರ ಜತೆಗೆ ಮನುಷ್ಯನ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿರಬೇಕು. ವಿದ್ಯಾರ್ಥಿಗಳು ಕಲೆ, ಸಾಹಿತ್ಯ ಕುರಿತು ಹಿರಿಯರಿಂದ ಮಾರ್ಗದರ್ಶನ ಪಡೆಯಬೇಕು ಎಂದು ಹೇಳಿದರು.
ಗೌರಿಬಿದನೂರಿನ ಎಸ್.ಎಸ್.ಇ.ಎ ಪಿಯು ಕಾಲೇಜಿನ ಪ್ರಾಂಶುಪಾಲ ಆದಿಶೇಷರಾವ್, ‘ವಿದ್ಯಾರ್ಥಿಗಳು ವಿಚಾರಗಳನ್ನು ಪರಿಪೂರ್ಣವಾಗಿ ಅರಿತುಕೊಳ್ಳಬೇಕು. ವೃತ್ತಿ ಆಯ್ಕೆಯಲ್ಲಿ ಹೃದಯವಂತಾರಾಗಬೇಕು. ಕಲಿಕೆಯಲ್ಲಿ ಬೇರೋಬ್ಬರಿಗೆ ಸಹಾಯ ಮಾಡುವುದು ಹೃದಯವಂತಿಕೆಯಾಗಿದೆ ಎಂದು ಹೇಳಿದರು.
ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ಸೀತರಾಮರೆಡ್ಡಿ, ‘ಓದು, ಅಂಕ ಪಡೆಯುವಲ್ಲಿ ಸಾಕಷ್ಟು ವಿದ್ಯಾರ್ಥಿಗಳಿದ್ದಾರೆ. ಆದರೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿದೆ. ವಿದ್ಯಾರ್ಥಿಗಳು ಯಾವುದೇ ಸಂಕೋಚವಿಲ್ಲದೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು’ ಎಂದು ಹೇಳಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ, ಬಿಜಿಎಸ್ ಪಿಯು ಕಾಲೇಜುಗಳ ಮುಖ್ಯಸ್ಥ ಡಾ.ಎನ್.ಮಧುಸೂಧನ್, ಪ್ರಾಂಶುಪಾಲ ಎಚ್.ಬಿ. ರಮೇಶ್, ಉಪಪ್ರಾಂಶುಪಾಲ ಜೆ. ಚಂದ್ರಮೋಹನ್, ಜ್ಯೋತಿ ಕಿರಣ್ ಇದ್ದರು.