ಗುಡಿಬಂಡೆ: ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ನಿಯಮಗಳಂತೆ ತಾಲ್ಲೂಕು ಕಚೇರಿ ಆವರಣದಲ್ಲಿ ಸರಳವಾಗಿ ಆಚರಿಸಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ತಹಶೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು. ಸರ್ಕಾರಿ ಪದವಿಪೂರ್ವ ಕಾಲೇಜಿನ ಮಿನಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ಸರಳವಾಗಿ ತಾಲ್ಲೂಕು ಕಚೇರಿ ಆವರಣದಲ್ಲಿಯೇ ಆಚರಣೆ ಮಾಡಲಾಗುವುದು. ತಾಲ್ಲೂಕು ಕಚೇರಿ ಬಳಿಯೇ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಎಲ್ಲಾ ಇಲಾಖೆಯ ಸಿಬ್ಬಂದಿ ಕಾರ್ಯಕ್ರಮಕ್ಕೆ ಮಾಸ್ಕ್ ಧರಿಸಿ ಆಗಮಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ಬಿಇಒ ವೆಂಕಟೇಶಪ್ಪ, ಸರ್ಕಾರಿ ನೌಕರರ ಸಂಘದ ಕೆ.ವಿ. ನಾರಾಯಣಸ್ವಾಮಿ, ಸ.ನ. ನಾಗೇಂದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾಲಾಜಿ, ಶ್ರೀರಾಮಪ್ಪ, ಕೃಷ್ಣಪ್ಪ, ಶಿವಣ್ಣ, ಭಾರ್ಗವಿ ಹಾಜರಿದ್ದರು.