ಸೊಳ್ಳೆಗಳ ನಿಯಂತ್ರಣವೇ ಡೆಂಗಿ ಜ್ವರದ ಹತೋಟಿಗೆ ಮುಖ್ಯ ವಿಧಾನ. ಮನೆಗಳಲ್ಲಿ ನೀರನ್ನು ಶೇಖರಿಸಿರುವ ಸಿಮೆಂಟ್ ತೊಟ್ಟಿ ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು ಡ್ರಮ್ ಬ್ಯಾರಲ್ ಮಣ್ಣಿನ ಮಡಿಕೆ ಟೈರ್ಗಳು ಮುಂತಾದ ಕಡೆ ಶೇಖರಣೆಯಾಗುವ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್ ತಿಳಿಸಿದ್ದಾರೆ. ನೀರಿನ ತೊಟ್ಟಿಗಳು ಡ್ರಮ್ ಬ್ಯಾರಲ್ ಗಳು ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೆ ಒಮ್ಮೆ ತಪ್ಪದೇ ಖಾಲಿ ಮಾಡಿ ಒಣಗಿಸಬೇಕು. ಪುನಃ ನೀರು ಭರ್ತಿ ಮಾಡಿಕೊಳ್ಳಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ಸರಿಯಾದ ಮುಚ್ಚಳದಿಂದ ಮುಚ್ಚಬೇಕು. ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟೈರು. ಎಳನೀರಿನ ಚಿಪ್ಪು ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು. ಸೂಕ್ತ ವಿಲೇವಾರಿ ಮಾಡಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆ ಬಳಸಬೇಕು ಎಂದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಡೆಂಗಿ ಜ್ವರದಿಂದ ರಕ್ಷಿಸಿಕೊಳ್ಳಲು ಸಲಹೆಗಳನ್ನು ನೀಡುತ್ತಿದ್ದಾರೆ. ಇವುಗಳನ್ನು ಜನರು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ರಕ್ತದ ಮಾದರಿ ಪರೀಕ್ಷೆ
ಡೆಂಗಿ ಶಂಕೆ ವ್ಯಕ್ತವಾದರೆ ಸ್ಥಳೀಯ ಆರೋಗ್ಯ ಕೇಂದ್ರದವರು ರಕ್ತದ ಮಾದರಿಗಳನ್ನು ಜಿಲ್ಲಾ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸುವರು’ ಎಂದು ಜಿಲ್ಲಾ ಡೆಂಗಿ ನಿಯಂತ್ರಣ ಅಧಿಕಾರಿ ಡಾ.ಪ್ರಕಾಶ್ ತಿಳಿಸಿದರು. ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಲಾರ್ವ ನಾಶ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಹೀಗೆ ಎಲ್ಲರೂ ಸೇರಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.