ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ| ತಂಬಾಕು ಗೀಳಿನಿಂದ ಸ್ವಾಸ್ಥ್ಯ ಹಾಳು:ಜಿಲ್ಲಾಧಿಕಾರಿ ಆರ್.ಲತಾ

ತಂಬಾಕಿನ ದುಷ್ಪರಿಣಾಮ ಕುರಿತು ಅರಿವು ಮೂಡಿಸುವ ‘ಗುಲಾಬಿ ಆಂದೋಲನ’ಕ್ಕೆ ಚಾಲನೆ
Last Updated 23 ಜನವರಿ 2020, 16:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ತಂಬಾಕು ಸೇವನೆ ಮತ್ತು ಧೂಮಪಾನ ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜತೆಗೆ ಸಾಮಾಜಿಕ ಸ್ವಾಸ್ಥ್ಯದ ಮೇಲೆ ಕೂಡ ವ್ಯತಿರಿಕ್ತ ಪರಿಣಾಮ ಉಂಟುಮಾಡುತ್ತದೆ. ಆದ್ದರಿಂದ ಯುವ ಜನರು ತಂಬಾಕು ಚಟದಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ಶೈಕ್ಷಣಿಕ ಸಂಸ್ಥೆಗಳ ಬಳಿ ತಂಬಾಕು ಉತ್ಪನ್ನ ಬಳಸದಂತೆ ಅರಿವು ಮೂಡಿಸುವ ‘ಗುಲಾಬಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಆರೋಗ್ಯವಂತ ಮನುಷ್ಯ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಲ್ಲ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಅದನ್ನು ಜೋಪಾನ ಮಾಡಿದರೆ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ತಂಬಾಕು ವ್ಯಸನಕ್ಕೆ ಒಳಗಾದವರು ಸಾವು–ನೋವು ಅನುಭವಿಸಬೇಕಾಗುತ್ತದೆ. ಆದ್ದರಿಂದ ತಂಬಾಕು ಸೇವನೆಯ ಹವ್ಯಾಸ ಹೊಂದಿರುವವರು ಕೆಟ್ಟ ಚಟದಿಂದ ಹೊರ ಬಂದಾಗ ಸುಂದರ ಸಮಾಜ ಸಾಧ್ಯ’ ಎಂದು ತಿಳಿಸಿದರು.

‘ತಂಬಾಕು ಸೇವನೆಯಿಂದ ಕ್ಯಾನ್ಸರ್‌ ಸೇರಿದಂತೆ ಅನೇಕ ಕಾಯಿಲೆಗಳು ಬರುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಯುವ ಜನರು ತಂಬಾಕು ಸೇವನೆ ಮಾಡುತ್ತಿದ್ದಾರೆ. ಭಾರತದಲ್ಲಿ ಪ್ರತಿ ವರ್ಷಕ್ಕೆ 10 ಲಕ್ಷಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಒಮ್ಮೆ ತಂಬಾಕು ವ್ಯಸನಕ್ಕೆ ಸಿಲುಕಿದರೆ ಹೊರ ಬರಲು ಸಾಧ್ಯವಿಲ್ಲ. ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕಂದಿನಿಂದಲೇ ಕೆಟ್ಟ ವ್ಯಸನಕ್ಕೆ ಬಲಿಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು’ ಎಂದರು.

ಶಾಲಾ–ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟಕಾ, ಮದ್ಯ, ಮಾದಕ ವಸ್ತುಗಳು ಮಾರಾಟ ಮಾರಾಟಕ್ಕೆ ನಿರ್ಬಂಧವಿದೆ. ಯಾರಾದರೂ ಮಾರಾಟ ಮಾಡಿದ್ದು ಕಂಡುಬಂದರೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್‌ಗೌಡ ಮಾತನಾಡಿ, ನಿಯಮಿತವಾಗಿ ಧೂಮಪಾನ ಮಾಡುವುದು, ತಂಬಾಕು ಬಳಕೆ ಮಾಡುವುದರಿಂದ ಹೃದ್ರೋಗ, ಶ್ವಾಸನಾಳಗಳ ಒಳಪೊರೆಯ ಉರಿಯೂತ, ಶ್ವಾಸಕೋಶದ ವಾಯುಕೋಶಗಳ ಊತ, ಪಾರ್ಶ್ವವಾಯು, ನೆನಪಿನ ಶಕ್ತಿ ಕುಂದುವಿಕೆ, ದೀರ್ಘಕಾಲದ ಶ್ವಾಸಕೋಶದ ಅಡಚಣೆಯಂತಹ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ದೃಢ ಸಂಕಲ್ಪದೊಂದಿಗೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

‘ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರಿಗೆ ಧೂಮಪಾನ, ಮದ್ಯ ಸೇವನೆ ನಿತ್ಯ ಜೀವನದ ಭಾಗವಾಗುತ್ತಿದೆ. ಇದರಿಂದ ದುಷ್ಪರಿಣಾಮದ ಸಾಧ್ಯತೆ ಹೆಚ್ಚು. ಹೀಗಾಗಿ ಇಂತಹ ಭಯಾನಕ ಚಟದಿಂದ ಹೊರ ಬರಲು ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು ಜನರಲ್ಲಿ ಆರೋಗ್ಯದ ಮೇಲೆ ಉಂಟಾಗುವ ಹಾನಿಗಳ ಕುರಿತು ಅರಿವು ಮೂಡಿಸಬೇಕು’ ಎಂದರು.

ತಂಬಾಕು ನಿಯಂತ್ರಣಾಧಿಕಾರಿ ಡಾ.ಬಾಬುರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಜಿ.ನಾಗೇಶ್ ಹಾಜರಿದ್ದರು. ನಗರದ ಹಳೆ ಜಿಲ್ಲಾ ಆಸ್ಪತ್ರೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ತಂಬಾಕು ಉತ್ಪನಗಳ ಸೇವನೆಯಿಂದ ಉಂಟಾಗುವ ಅನಾಹುತಗಳ ಕುರಿತು ಸಾರ್ವಜನಿಕರಿಗೆ ಕರ ಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT