ಚಿಕ್ಕಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮುಖಗವಸು (ಮಾಸ್ಕ್) ವಿತರಿಸುವ ಮೂಲಕ ಜನ ಜಾಗೃತಿ ಮೂಡಿಸಿದರು.
ಈ ವೇಳೆ ಮಾತನಾಡಿದ ಕರವೇ ರಾಜ್ಯ ಘಟಕದ ಅಧ್ಯಕ್ಷ ಅಗಲಗುರ್ಕಿ ಚಲಪತಿ, ‘ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡೆ ನೀಡಿರುವ ಜನತಾ ಕರ್ಫ್ಯೂಗೆ ಜನರು ಸ್ವಯಂ ಪ್ರೇರಣೆಯಿಂದ ಕೈಜೋಡಿಸಬೇಕಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಔಷಧಿ ಇಲ್ಲದಿರುವುದರಿಂದ, ಇದರ ಹರಡುವಿಕೆ ನಿಯಂತ್ರಿಸುವಲ್ಲಿ ನಾಗರಿಕರ ಪಾತ್ರ ಮುಖ್ಯವಾಗಿದೆ’ ಎಂದು ಹೇಳಿದರು.
‘ಕೊರೊನಾ ತೊಲಗಿಸಲು ಪ್ರತಿಯೊಬ್ಬರೂ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ದೇಶದ ಹೋರಾಟಕ್ಕೆ ಕೈಜೋಡಿಸಬೇಕು. ಈ ಮಾರಾಣಾಂತಿಕ ಸೋಂಕು ಅತಿ ವೇಗದಲ್ಲಿ ಹರಡುತ್ತದೆ. ಆದ್ದರಿಂದ ಕೆಲಸವಿಲ್ಲದೆ ಜನರು ಅನವಶ್ಯಕವಾಗಿ ಮನೆಯಿಂದ ಹೊರಗೆ ಬರಬಾರದು. ಒಂದು ವಾರ ಕಟ್ಟುನಿಟ್ಟಾಗಿ ಮನೆಯಲ್ಲಿದ್ದು, ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ತಿಳಿಸಿದರು.
‘ಮಾರಕ ಕಾಯಿಲೆ ವಿರುದ್ಧ ಎಲ್ಲರೂ ಹೋರಾಡಬೇಕಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ವೈದ್ಯರ ಸಲಹೆ, ಸೂಚನೆಗಳನ್ನು ತಪ್ಪದೆ ಪಾಲಿಸಬೇಕು. ಕೊರೊನಾ ಶಾಶ್ವತವಾಗಿ ಹೋಗುವವರೆಗೂ ಸಭೆ, ಸಮಾರಂಭ ಮುಂದೂಡಬೇಕು. ಆರೋಗ್ಯ ದೊಡ್ಡ ಸಂಪತ್ತು ಎನ್ನುವುದು ಪ್ರತಿಯೊಬ್ಬರೂ ಅರಿತು ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು’ ಎಂದರು.
ಕರವೇ ರಾಜ್ಯ ಘಟಕದ ಉಪಾಧ್ಯಕ್ಷ ಮೋತಿರಾಮ್, ಜಿಲ್ಲಾ ಘಟಕದ ಅಧ್ಯಕ್ಷ ಆಂಥೋಣಿ ಸ್ವಾಮಿ, ಪದಾಧಿಕಾರಿಗಳಾದ ಅಂಬರೀಶ್, ಹರಳಪ್ಪ, ದೇವರಾಜ್ ಹಾಜರಿದ್ದರು.