ಗೌರಿಬಿದನೂರು: ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಿದಲ್ಲಿ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಹಿರಿಯ ಕೆಎಎಸ್ ಅಧಿಕಾರಿ ಬಿ.ಎನ್.ವರಪ್ರಸಾದರೆಡ್ಡಿ ತಿಳಿಸಿದರು.
ತಾಲ್ಲೂಕಿನ ಅಲಕಾಪುರದಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಕಲ್ಯಾಣಿ ಸ್ವಚ್ಛತಾ ಕಾರ್ಯ ಹಾಗೂ ಶಿಕ್ಷಕರ ದಿನಾಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
‘ಗ್ರಾಮೀಣ ಭಾಗದ ಅಭಿವೃದ್ಧಿಯ ಜತೆಗೆ ಅಲ್ಲಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದೆ. ಈ ಭಾಗವು ನಗರಕ್ಕೆ ಸಮೀಪದಲ್ಲಿದ್ದು ಜನತೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದಕ್ಕೆ ಪೂರಕವಾಗಿ ಯುವಕರಿಗೆ ಸ್ಪೂರ್ತಿದಾಯಕ ಚಿಂತನೆಗಳನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಅವರು ಹೇಳಿದರು.
ಇದೇ ವೇಳೆ ಅಲಕಾಪುರದ ಶ್ರೀಚನ್ನಸೋಮೇಶ್ವರ ದೇವಾಲಯದ ಆವರಣದಲ್ಲಿರುವ ಪುರಾತನ ಕಲ್ಯಾಣಿಯನ್ನು ಸ್ವಚ್ಛಗೊಳಿಸಲಾಯಿತು. ಬಳಿಕ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪಡೆದ ಟಿ.ಕೆ.ನಾಗೇಶ್ ಹಾಗೂ ಮಂಜುನಾಥ್ ಅವರನ್ನು ಲಯನ್ಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಇದೇ ವೇಳೆ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಆರ್.ಜೆ.ಶ್ರೀಣಿಕ್, ಪದಾಧಿಕಾರಿಗಳಾದ ಶ್ರೀಧರ್, ಕೆ.ರಾಮಾಂಜನೇಯಲು, ಜಿ.ಎನ್.ಸೂರಜ್, ಇ.ಎಸ್.ಸತೀಶ್, ವೈ.ಎನ್.ಅಂಭಿಕಾ, ಬಿ.ಮಂಜುನಾಥ್, ವಿ.ರವೀಂದ್ರನಾಥ್, ಡಿ.ಅಶ್ವತ್ಥರೆಡ್ಡಿ, ಮುಖಂಡರಾದ ಬಿ.ಜಿ.ವೇಣುಗೋಪಾಲರೆಡ್ಡಿ, ಸೋಮೇಶ್ ಇತರರು ಭಾಗವಹಿಸಿದ್ದರು.