ಚಿಂತಾಮಣಿ: ತಾಲ್ಲೂಕಿನ ಮೂಗಲಮರಿ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ಬೃಹತ್ ಬೈಕ್ ರ್ಯಾಲಿ ಆಯೋಜಿಸಿತ್ತು. ಕಾರ್ಯಕರ್ತರು ಬೈಕ್ ರ್ಯಾಲಿಗೆ ತೆರಳಲು ಗ್ರಾಮದ ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು ಎನ್ನಲಾಗಿದೆ. ಜೆಡಿಎಸ್ ಕಾರ್ಯಕರ್ತ ಶಿವರಾಜ್ ಎಂಬುವರು ರಸ್ತೆಯಲ್ಲಿನ ಬೈಕ್ ತೆಗೆಯುವಂತೆ ಒತ್ತಾಯಿಸಿದ್ದಾರೆ. ಈ ವಿಷಯವಾಗಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಇದು ವಿಕೋಪಕ್ಕೆ ತಿರುಗಿ ಸಂಘರ್ಷ ಏರ್ಪಟ್ಟಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಕಾಂಗ್ರೆಸ್ನ ಐವರು ಮತ್ತು ಜೆಡಿಎಸ್ನ ಮೂವರು ಗಾಯಗೊಂಡಿದ್ದಾರೆ.
ಶಾಸಕ ಎಂ.ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಜೆಡಿಎಸ್ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಘರ್ಷಣೆ ಬಗ್ಗೆ ಎರಡು ಕಡೆಯವರು ದೂರು, ಪ್ರತಿದೂರು ನೀಡಿದ್ದು, ಕೆಂಚಾರ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.