ಬಾಗೇಪಲ್ಲಿ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮಾಭಿವೃದ್ಧಿ ಬ್ಯಾಂಕ್ಅಧ್ಯಕ್ಷರಾಗಿ ವಿ. ಪ್ರಭಾಕರ ರೆಡ್ಡಿ ಮತ್ತು ಉಪಾಧ್ಯಕ್ಷೆಯಾಗಿ ಕೆ.ಸಿ. ಲಕ್ಷ್ಮಿದೇವಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಯಾಂಕ್ ಆವರಣದಲ್ಲಿ ಶನಿವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಇಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ,ಚುನಾವಣಾಧಿಕಾರಿ ಎಂ. ಪ್ರೇಮ್ಕುಮಾರ್ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷೆಯನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಪುರಸಭಾ ಉಪಾಧ್ಯಕ್ಷ ಎ. ಶ್ರೀನಿವಾಸ್, ಸದಸ್ಯ ಅಶೋಕ್ ರೆಡ್ಡಿ, ಯುವ ಮುಖಂಡ ಅಮರನಾಥರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಅಭಿನಂದಿಸಿದರು.
ಅಧ್ಯಕ್ಷ ಪ್ರಭಾಕರ ರೆಡ್ಡಿ ಮಾತನಾಡಿ, ರೈತರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಬ್ಯಾಂಕ್ನ ವಹಿವಾಟು ಹೆಚ್ಚಿಸಲು ಕ್ರಮವಹಿಸಲಾಗುವುದು. ಅರ್ಹ ರೈತ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುವುದು. ಬಾಕಿ ಇರುವ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಬ್ಯಾಂಕ್ನ ಪ್ರಭಾರ ವ್ಯವಸ್ಥಾಪಕ ಕೆ.ಪಿ. ಶಶಿಧರ್, ಗಣಕಯಂತ್ರ ಅಧಿಕಾರಿ ಧರ್ಮಿಣಿ ಹಾಜರಿದ್ದರು.