ಚಿಕ್ಕಬಳ್ಳಾಪುರ: ವಾಹನಗಳ ಚಾಲನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ರಾಜಶೇಖರ್ ಅವರು ತಿಳಿಸಿದರು.
ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬುಧವಾರ ನಡೆದ ಮಹಿಳಾ ಸಬಲೀಕರಣ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕಾನೂನಿನಲ್ಲಿರುವ ನಿಯಮಗಳನ್ನು ಅರಿತುಕೊಳ್ಳಬೇಕು. ವಾಹನಗಳ ಚಾಲನೆ ಮಾಡುವ ಸಮಯದಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಲಿಸುವಾಗ ವಾಹನ ಚಾಲನಾಪತ್ರ, ವಾಹನ ವಿಮೆ, ಹೊಗೆ ನಿಯಂತ್ರಣ ಪತ್ರಗಳನ್ನು ಕಡ್ಡಾಯವಾಗಿ ಮಾಡಿಸಿ ಇರಿಸಿಕೊಂಡಿರಬೇಕು ಎಂದರು.
ನ್ಯಾಯಾಧೀಶೆ ಎ.ಅರುಣಾಕುಮಾರಿ ಮಾತನಾಡಿ, ಬಾಲ್ಯವಿವಾಹವು ಅನಿಷ್ಟ ಪದ್ಧತಿ. ಅದನ್ನು ಬೇರು ಸಮೇತ ಕಿತ್ತು ಹಾಕಬೇಕು. ಮಗು ತಾಯಿಯ ಭ್ರೂಣದಿಂದ ಹಿಡಿದು ಹೆರಿಗೆ ಆಗುವವರೆಗೂ ಕಾನೂನು ನಿಯಮಗಳು ಅಳವಡಿಕೆ ಆಗುತ್ತವೆ ಎಂದರು.
ಹೆಣ್ಣು ಮಕ್ಕಳಿಗೆ ಇರುವ ವಿವಿಧ ಕಾಯ್ದೆ, ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಹಕ್ಕು ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್ ಮಾತನಾಡಿ, ಹೆಣ್ಣು ಮಕ್ಕಳಿಗೆ ಇರುವ ಕಾನೂನು ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿದರು. ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಅವರದ್ದೇ ಸ್ಥಾನವಿದೆ. ಅವರ ಜೊತೆ ಗೌರವದಿಂದ ವರ್ತಿಸಬೇಕು. ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಪಣತೊಟ್ಟು ದುಡಿಯಬೇಕು ಎಂದು ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್ ಮಾತನಾಡಿ, ತಾಯಿಯೇ ಮೊದಲ ಗುರು. ಹೆಣ್ಣು ಅಂದರೆ ತಾಯಿ. ತಂದೆ ತಾಯಿಯನ್ನು ವೃದ್ಧಾಶ್ರಮಗಳಿಗೆ ಕಳುಹಿಸಿಕೊಡುವುದು ದೊಡ್ಡ ತಪ್ಪು. ಹೆಣ್ಣು ಮಕ್ಕಳ ಜೊತೆ ವಿನಯದಿಂದ ನಡೆದುಕೊಳ್ಳಬೇಕು, ಅವರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.