ಲಸಿಕೆ ಹಾಕಿಸಿಕೊಂಡು ಕೊರೊನಾ ಮುಕ್ತರಾಗಿ: ಸಂಸದ ಮುನಿಸ್ವಾಮಿ

ಮಾಲೂರು: ದೇಶದ ಜನತೆಯ ಆರೋಗ್ಯ ದೃಷ್ಟಿಯಿಂದ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ 40 ವರ್ಷ ದಾಟಿದ ಮಹಿಳಾ ಪುರುಷರಿಗೆ ಉಚಿತ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ದೇಶದ ವಿಜ್ಞಾನಿಗಳು ಕೊರೊನಾ ನಿವಾರಣೆಗೆ ಲಸಿಕೆ ಕಂಡು ಹಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆತ್ಮನಿರ್ಭರ ಯೋಜನೆ ಅಡಿ ಇತರೆ ದೇಶಗಳಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 76 ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುತ್ತಿದೆ. ತಾಲ್ಲೂಕಿನ ವ್ಯಾಪ್ತಿಯಲ್ಲಿ 10 ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ’ ಎಂದರು.
‘ಗ್ರಾಮೀಣ ಭಾಗದಲ್ಲಿ ವಾಹನ ಸೌಲಭ್ಯ ಇಲ್ಲದ ಗ್ರಾಮಗಳ ಜನತೆಯನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಾಹನ ಸೌಲಭ್ಯ ಕಲ್ಪಿಸಿ ಲಸಿಕೆ ಹಾಕಿಸಿಕೊಳ್ಳಲು ಸಹಕಾರ ನೀಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಹಣ ಪಡೆದು ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ 100 ಮಂದಿಯಂತೆ ಜಿಲ್ಲೆಯಲ್ಲಿ ಸುಮಾರು 72,600 ಮಂದಿಗೆ ಪ್ರತಿ ದಿನ ಉಚಿತವಾಗಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ’ ಎಂದರು.
ತಾಲ್ಲೂಕು ಆರೋಗ್ಯಧಿಕಾರಿ ಡಾ.ಪ್ರಸನ್ನ, ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಸಂತ್, ಡಾ.ಶ್ರೀನಿವಾಸ್, ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಎಂ. ರಾಮಮೂರ್ತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾ, ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ. ಪದ್ಮಾವತಿ ತಾಲ್ಲೂಕು ಕಾರ್ಯದರ್ಶಿ ಅಂಬರೀಷ್, ಮುಖಂಡರಾದ ಪಿ.ನಾರಾಯಣಸ್ವಾಮಿ, ಆಲೂ ಮಂಜುನಾಥ್ ಸುರೇಶ್ ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.