ಚಿಕ್ಕಬಳ್ಳಾಪುರ: ಸುಗ್ರಿವಾಜ್ಞೆ ಮೂಲಕ ಭೂಸುಧಾರಣೆ, ಕೈಗಾರಿಕೆ, ಎಪಿಎಂಸಿ ಸೇರಿ ಹಲವು ಕಾಯ್ದೆಗಳನ್ನು ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಜೆಡಿಎಸ್ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ‘ರಾಜ್ಯ ಸರ್ಕಾರ ಜನಸಾಮಾನ್ಯರ ಹಿತ ಕಡೆಗಣಿಸಿ ರೈತರು, ಕಾರ್ಮಿಕರ ಹಿತ ಗಾಳಿಗೆ ತೂರಿ, ಕಾಯ್ದೆಗಳ ತಿದ್ದುಪಡಿ ಮೂಲಕ ಬಂಡವಾಳ ಶಾಹಿಗಳಿಗೆ ಅನುವು ಮಾಡಿಕೊಡಲು ಹೊರಟಿದೆ. ಕೂಡಲೇ ತಿದ್ದುಪಡಿಗಳನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.
‘ಭೂಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದ ಹಣದಾಸೆಗೆ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಉಳ್ಳವರು, ಕಪ್ಪು ಹಣ ಹೊಂದಿದವರು ಯಥೇಚ್ಛವಾಗಿ ಭೂಮಿ ಖರೀದಿಸಿ ಬೇಲಿ ಹಾಕಿ, ರಿಯಲ್ ಎಸ್ಟೆಟ್ ಉದ್ಯಮದ ಮೂಲಕ ಹಣ ಮಾಡುವ ದಂಧೆ ಆರಂಭಿಸಲಿದ್ದಾರೆ. ಅನ್ನದಾತರಿಗೆ ಮಾರಕವಾದ ಈ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು’ ಎಂದು ಹೇಳಿದರು.
‘ಲಾಕ್ಡೌನ್ನಂತಹ ವಿಷಮ ಪರಿಸ್ಥಿತಿಯಲ್ಲಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಳ್ಳರ ರೀತಿಯಲ್ಲಿ ಕಾರ್ಪೋರೆಟ್ ಕಂಪೆನಿಗಳಿಗೆ ಧಾರೆ ಎರೆದಿರುವುದು ಅತ್ಯಂತ ಅಮಾನವೀಯ ಕ್ರಮ. ಇದು ಕೃಷಿ ರಂಗಕ್ಕೆ ಕಂಟಕ. ಇದರಿಂದ ರೈತರು ಬೀದಿಗೆ ಬೀಳುವ ಸಂದರ್ಭ ಬಂದಿದೆ’ ಎಂದರು.
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ, ‘ಇಡೀ ಜನಜೀವನದ ಮೇಲೆ ಪರಿಣಾಮ ಬೀರುವಂತಹ ತಿದ್ದುಪಡಿಗಳನ್ನು ಶಾಸನಸಭೆ, ಸಂಸತ್ತಿನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ. ಬಡ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಿ ದಿವಾಳಿ ಮಾಡುವುದು ಇದರ ಹಿಂದಿನ ಸಂಚು’ ಎಂದು ಆರೋಪಿಸಿದರು.
‘ಲಾಕ್ಡೌನ್ನಂತಹ ಸಂದರ್ಭದಲ್ಲಿ ಸರ್ವಾಧಿಕಾರಿ ಕ್ರಮದಿಂದ ಸುಗ್ರಿವಾಜ್ಞೆ ಮೂಲಕ ಹಲವು ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಬೇಕಿದೆ‘ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ, ‘ರೈತನೇ ದೇಶದ ಬೆನ್ನೆಲುಬು ಎಂದು ಹೇಳುತ್ತಲೇ ರೈತರನ್ನು ಮೂಲೆಗುಂಪು ಮಾಡುವ ಕೆಲಸ ಮಾಡಲಾಗುತತಿದೆ. ಉದ್ಯಮಿಗಳ ಲಾಬಿಗೆ ಮಣಿದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತ ಬಂದ ಪರಿಣಾಮ, ಇವತ್ತು ಅನ್ನದಾತರು ಬೀದಿಗೆ ಬೀಳುವ ಸ್ಥಿತಿ ಬಂದಿದೆ’ ಎಂದು ತಿಳಿಸಿದರು.
’ರಾಜ್ಯ ಸರ್ಕಾರ ರೈತ ಸಮುದಾಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಖರೀದಿಗೆ ಇದ್ದ ನಿರ್ಬಂಧ ಸಡಿಲಿಸಲಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಿಂದ ಎಪಿಎಂಸಿ ಮುಚ್ಚಲಿವೆ. ವರ್ತಕರು, ನೌಕರರು, ಹಮಾಲರು ಮತ್ತು ಇತರೆ ಕಾರ್ಮಿಕರು ನಿರುದ್ಯೋಗಿಗಳಾಗಲಿದ್ದಾರೆ. ಜತೆಗೆ ರೈತರ ಶೋಷಣೆ ಹೆಚ್ಚಲಿದೆ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ.ರಾಜಾಕಾಂತ್, ಬಂಕ್ ಮುನಿಯಪ್ಪ, ತನುಜಾ ರಘು, ಮುಖಂಡರಾದ ಮೇಲೂರು ರವಿಕುಮಾರ್, ನರಸಿಂಹಮೂರ್ತಿ, ಮಂಜುನಾಥ್ ರೆಡ್ಡಿ, ಸಿ.ಡಿ.ಗಂಗುಲಪ್ಪ, ನರಸಿಂಹ ನಾಯ್ಡು, ಅಂಗರೇಕನಹಳ್ಳಿ ರವಿಕುಮಾರ್, ಆರ್.ಮಟಮಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.