ಚಿಕ್ಕಬಳ್ಳಾಪುರ/ಬಾಗೇಪಲ್ಲಿ: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಗುರುವಾರ ಪ್ರಚಾರ ನಡೆಸಿದ ಅವರು, ತನಿಖೆ ಪೂರ್ಣವಾದ ಮೇಲೆ ತಪ್ಪಿತಸ್ಥ ಎಂದು ಸಾಬೀತಾಗುತ್ತದೆ. ಭ್ರಷ್ಟಾಚಾರ ನಡೆದಿದೆ ಎನ್ನುವುದು ನೂರಕ್ಕೆ ನೂರರಷ್ಟು ತೀರ್ಮಾನವಾಗುತ್ತದೆ. ಆಗ ಅವರು ಜೈಲಿಗೆ ಹೋಗಬೇಕಾಗುತ್ತದೆ ಎಂದರು.
ಕೋವಿಡ್ನಲ್ಲಿ ಭ್ರಷ್ಟಾಚಾರ ನಡೆಸಿದ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದರು.
ಮೋದಿಯವರು ತಮ್ಮ ಹತ್ತು ವರ್ಷದ ಆಡಳಿತದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸಿಲ್ಲ. ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದರು.
‘ರಾಜ್ಯ ಸರ್ಕಾರ ಪತನವಾಗುತ್ತದೆ ಎನ್ನುವುದು ಭ್ರಮೆ. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ. ನಂತರದ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ’ ಎಂದರು.