ಚಿಕ್ಕಬಳ್ಳಾಪುರ: ‘ಈ ಕ್ಷೇತ್ರವಷ್ಟೇ ಅಲ್ಲ, ರಾಜ್ಯದಲ್ಲಿ ಕಾಂಗ್ರೆಸ್ಗೆ ಮೋಸ ಮಾಡಿ ಹೋದವರು ಮುಂದಿನ ಚುನಾವಣೆಯಲ್ಲಿ ಮಣ್ಣು ಮುಕ್ಕುವರು’ ಎಂದು ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ತಿಳಿಸಿದರು.
ಜ.23ರಂದು ನಗರದಲ್ಲಿ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿರುವ ‘ಪ್ರಜಾಧ್ವನಿ ಯಾತ್ರೆ’ ಸಮಾವೇಶದ ಹಿನ್ನೆಲೆಯಲ್ಲಿ ಶುಕ್ರವಾರ ತಾಲ್ಲೂಕಿನ ನಂದಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಚಿವ ಡಾ.ಕೆ.ಸುಧಾಕರ್ ಅವರದ್ದು ಬರಿ ಪ್ರಚಾರ ತಂತ್ರ. ಅವರ ಮುಖ ಕಾಣಬೇಕು ಅಷ್ಟೇ. ಸುಧಾಕರ್ ಮತ್ತು ಬಸವರಾಜ ಬೊಮ್ಮಾಯಿ ಮುಖ ನೋಡಿ ನೋಡಿ ಜನರಿಗೆ ಜಿಗುಪ್ಸೆ ಬಂದಿದೆ. ಆ ಜಿಗುಪ್ಸೆಯಿಂದಲೇ ಇವರ ನೋಲು ಆಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಬೆಳಗಾವಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭವಾಗಿದೆ. ಸಿದ್ದರಾಮಯ್ಯ ಅವರ ಜನ್ಮದಿನ, ಸ್ವಾತಂತ್ರ್ಯದ ಅಮೃತಮಹೋತ್ಸವ, ಮೇಕೆದಾಟು ಪಾದಯಾತ್ರೆ, ನಾ ನಾಯಕಿ ಸೇರಿದಂತೆ ಕಾಂಗ್ರೆಸ್ ನಡೆಸಿರುವ ಎಲ್ಲ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಸೇರುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಈಗ ಲಂಬಾಣಿ ಸಮುದಾಯಕ್ಕೆ ಹಕ್ಕುಪತ್ರ ನೀಡುತ್ತಿದ್ದೇವೆ ಎನ್ನುತ್ತಿದ್ದಾರೆ. ಆದರೆ 1993ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರು ಕಂದಾಯ ಸಚಿವರಾಗಿದ್ದರು. ಆಗಲೇ ಹಕ್ಕುಪತ್ರ ಕೊಡುವ ಕೆಲಸ ಆಗಿತ್ತು ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ವಿನಯ್ ಎನ್.ಶ್ಯಾಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಪಕ್ಷದ ಮುಖಂಡರಾದ ಯಲುವಳ್ಳಿ ರಮೇಶ್, ಕೆ.ಎನ್.ರಘು, ಗಂಗರೇಕಾಲುವೆ ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಮಾಜಿ ಶಾಸಕ ಶಿವಾನಂದ್ ಇತರರು ಇದ್ದರು.