ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರದ್ಧಾಭಕ್ತಿಯ ಕಾರ್ತಿಕ ಸಡಗರ: ವಿವಿಧೆಡೆ ದೀಪೋತ್ಸವ ಸರಳ ಆಚರಣೆ

Last Updated 29 ನವೆಂಬರ್ 2021, 15:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಕಡೇ ಕಾರ್ತಿಕ ಸೋಮವಾರವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಜನರು ದೇಗುಲಗಳತ್ತ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ತಾಲ್ಲೂಕಿನ ನಂದಿ ಗ್ರಾಮದಲ್ಲಿರುವ ಭೋಗ ನಂದೀಶ್ವರ ದೇವಸ್ಥಾನ, ನಗರದ ಎಂ.ಜಿ. ರಸ್ತೆಯಲ್ಲಿರುವ ಮರುಳಸಿದ್ದೇಶ್ವರ, ಕಂದವಾರ ಬಾಗಿಲು ರಸ್ತೆಯ ವೆಂಕಟರಮಣ ಸ್ವಾಮಿ, ಕೋಟೆ ಚನ್ನಕೇಶವ ಸ್ವಾಮಿ, ನಂದೀಶ್ವರ, ವರಸಿದ್ಧಿ ವಿನಾಯಕ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ಧರ್ಮಛತ್ರ ರಸ್ತೆಯ ವಿದ್ಯಾಗಣಪತಿ, ಗಂಗಮ್ಮನಗುಡಿ ರಸ್ತೆಯ ಜಾಲಾರಿ ಗಂಗಮ್ಮ, ಕೋದಂಡರಾಮ ಸ್ವಾಮಿ, ವಾಪಸಂದ್ರದಲ್ಲಿರುವ ನಿಡುಮಾಮಿಡಿ ಮಠ, ಎಚ್‌.ಎಸ್‌. ಗಾರ್ಡನ್‌ನಲ್ಲಿರುವ ಸುಬ್ರಮಣ್ಯೇಶ್ವರ, ಶನೇಶ್ವರ ಮತ್ತು ಶಿರಡಿ ಸಾಯಿ ಬಾಬಾ ಮುಂತಾದ ದೇವಸ್ಥಾನಗಳಲ್ಲಿ ದಿನವೀಡಿ ಸಂಭ್ರಮ ಮನೆ ಮಾಡಿತ್ತು.

ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಅಭಿಷೇಕ, ಪೂಜೆ, ಮಹಾ ಮಂಗಳಾರತಿ ನಡೆದವು. ವಿಶೇಷ ಅಲಂಕಾರ ಮಾಡಲಾಗಿತ್ತು. ಅನೇಕ ಕಡೆಗಳಲ್ಲಿ ಪ್ರಸಾದ, ಭಕ್ತಿ ಸಂಗೀತದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಹುತೇಕ ದೇವಸ್ಥಾನಗಳು ರಾತ್ರಿ ವಿದ್ಯುತ್‌ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿದ್ದವು.

ಮಹಿಳೆಯರು ದೇಗುಲ ಆವರಣದಲ್ಲಿ ಎಲೆಯ ಮೇಲೆ ಪೂಜಾ ಸಾಮಗ್ರಿಗಳೊಂದಿಗೆ ಅಕ್ಕಿ, ಬೆಲ್ಲ, ಬಾಳೆಹಣ್ಣು ಇಟ್ಟು ದೇವರಿಗೆ ನೈವೇದ್ಯ ಮಾಡಿ ಹೊಸದಾಗಿ ಖರೀದಿಸಿ ತಂದ ಮಣ್ಣಿನ ಹಣತೆಗಳಲ್ಲಿ ದೀಪ ಹೊತ್ತಿಸಿ ದೇವರಿಗೆ ನಮಿಸುತ್ತಿದ್ದರು. ಸಂಜೆಯಾಗುತ್ತಿದ್ದಂತೆ ಕುಟುಂಬ ಸಮೇತರಾಗಿ ದೇಗುಲಗಳತ್ತ ಮುಖ ಮಾಡಿದ ಜನರು ದೇವಸ್ಥಾನಗಳಲ್ಲಿ ತಮ್ಮ ಶಕ್ತ್ಯಾನುಸಾರ ದೀಪಗಳನ್ನು ಹೊತ್ತಿಸಿ, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದರು.

ಭೋಗ ನಂದೀಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ದಟ್ಟಣೆ ಕಂಡುಬಂತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಭೋಗನಂದೀಶ್ವರ, ಅರುಣಾಚಲೇಶ್ವರ, ಉಮಾಮಹೇಶ್ವರ ಮತ್ತು ಗಿರಿಜಾ ಮಾತೆಗೆ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಭೋಗ ನಂದೀಶ್ವರ ದೇವಸ್ಥಾನ ದೇಗುಲದ ಆವರಣದಲ್ಲಿ ಭಕ್ತರು ಹೊತ್ತಿಸಿದ ಹಣತೆಗಳ ಸಮೂಹ ಇಡೀ ದೇಗುಲಕ್ಕೆ ಹೊಸ ಮೆರುಗು ನೀಡಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಭೋಗ ನಂದೀಶ್ವರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ‘ಕಡೇ ಕಾರ್ತಿಕ ಸೋಮವಾರ ಎಲ್ಲರಿಗೂ ಒಳಿತನ್ನು ತರಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT