ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದರು. ಅವರಿಗೆ ಇದು ಮೊದಲ ಲೋಕಸಭಾ ಚುನಾವಣೆಯಾಗಿತ್ತು. ಕಾಂಗ್ರೆಸ್ನಿಂದ ರಕ್ಷಾ ರಾಮಯ್ಯ ಪ್ರತಿಸ್ಪರ್ಧಿಯಾಗಿದ್ದರು.
ಡಾ.ಕೆ.ಸುಧಾಕರ್ ಒಟ್ಟು 8,22,619 ಮತಗಳನ್ನು ಪಡೆದರೆ ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ. 1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟೂ ವಿಧಾನಸಭಾ ಕ್ಷೇತ್ರಗಳ ಪೈಕಿ ದೊಡ್ಡಬಳ್ಳಾಪುರ ಮತ್ತು ಯಲಹಂಕದಲ್ಲಿ ಬಿಜೆಪಿ ಶಾಸಕರು, ದೇವನಹಳ್ಳಿ, ಹೊಸಕೋಟೆ, ಬಾಗೇಪಲ್ಲಿ, ನೆಲಮಂಗಲ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಗೌರಿಬಿದನೂರಿನಲ್ಲಿ ಪಕ್ಷೇತರ ಶಾಸಕರು ಇದ್ದಾರೆ. ಪಕ್ಷೇತರ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಕಾಂಗ್ರೆಸ್ ಬೆಂಬಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು, ಶಾಸಕರ ಬಲ ಮತ್ತು ಅಹಿಂದ ಮತಗಳ ಕಾರಣದಿಂದ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವನ್ನು ಹೊಂದಿತ್ತು. ಲೋಕಸಭಾ ಕ್ಷೇತ್ರದ ಇತಿಹಾಸವನ್ನು ನೋಡಿದರೆ ಕಾಂಗ್ರೆಸ್ನ ಅಭ್ಯರ್ಥಿಗಳು ಹೆಚ್ಚು ಬಾರಿ ಗೆಲುವು ಸಾಧಿಸಿದ್ದಾರೆ.
ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈ ಕ್ಷೇತ್ರದಲ್ಲಿ ಚುನಾವಣೆಯಿಂದ ಚುನಾವಣೆಗೆ ಬಿಜೆಪಿ ಪ್ರಬಲವಾಗುತ್ತಿದೆ. ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಕಮಲ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಕಾರಣದಿಂದ ಚಿಕ್ಕಬಳ್ಳಾಪುರ ಕ್ಷೇತ್ರದ ಕಮಲದ ತೆಕ್ಕೆಗೆ ಮತ್ತೊಮ್ಮೆ ಜಾರುತ್ತದೆ ಎನ್ನುವ ಅಚಲ ವಿಶ್ವಾಸ ಬಿಜೆಪಿಯಲ್ಲಿತ್ತು. ಅದೇ ಪ್ರಕಾರ ಬಿಜೆಪಿ ಮತ್ತೊಮ್ಮೆ ಗೆದ್ದು ಬೀಗಿದೆ.
ಬಾಗೇಪಲ್ಲಿ ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಡಾ.ಕೆ.ಸುಧಾಕರ್ ಮುನ್ನಡೆ ಪಡೆದಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಬಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ಗೆ ಉತ್ತಮವಾದ ನೆಲೆ ಇದೆ. ತನ್ನದೇ ಆದ ಮತ ಬ್ಯಾಂಕ್ ಇದೆ. ಎರಡೂ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಸಂಘಟಿತವಾಗಿ ಗೆಲುವಿಗೆ ಹೋರಾಟ ನಡೆಸಿದರು.
ಸುಧಾಕರ್ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಜೆಡಿಎಸ್ ತೊರೆದರು. ಇದನ್ನು ಹೊರತುಪಡಿಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಿಯೂ ಜೆಡಿಎಸ್, ಬಿಜೆಪಿ ನಡುವೆ ಬಿರುಕು ಮೂಡಲಿಲ್ಲ. ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಬಿರುಸಿನ ಪ್ರಚಾರ ಜೆಡಿಎಸ್ಗಷ್ಟೇ ಅಲ್ಲ ಬಿಜೆಪಿಗೂ ಹುಮ್ಮಸ್ಸು ಮೂಡಿಸಿತು. ಹೀಗೆ ಜೆಡಿಎಸ್ ಬೆಂಬಲ ಸುಧಾಕರ್ ಅವರ ಗೆಲುವಿಗೆ ಪ್ರಮುಖಅಂಶವಾಗಿದೆ.
ಎಚ್ಚರಿಕೆಯ ಹೆಜ್ಜೆ: ವಿಧಾನಸಭೆ ಚುನಾವಣೆಯಲ್ಲಿನ ಸೋಲು ಸುಧಾಕರ್ ಅವರು ಲೋಕಸಭೆ ಚುನಾವಣೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡುವಂತೆ ಮಾಡಿತ್ತು. ಈ ಹಿಂದೆ ತಮ್ಮಿಂದ ಆದ ಲೋಪಗಳನ್ನು ಸರಿಪಡಿಸಿಕೊಂಡು ಮುನ್ನಡೆದರು. ‘ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ’ ಎಂದು ಬಹಿರಂಗವಾಗಿಯೇ ಕ್ಷಮೆ ಕೋರಿದ್ದರು. ಕಣ್ಣೀರು ಸಹ ಹಾಕಿದ್ದರು.
ತಾವು ಗೆಲುವು ಸಾಧಿಸಿದರೆ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳು ಮತ್ತು ವಿಷಯಗಳನ್ನು ‘ವಿಕಸಿತ ಚಿಕ್ಕಬಳ್ಳಾಪುರ‘ ಹೆಸರಿನ ಪ್ರಣಾಳಿಕೆಯಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟರು. ಹೀಗೆ ತಮಗೆ ದೊರೆತ ಪ್ರತಿ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಲೇ ನಡೆದರು. ಈ ಎಲ್ಲವೂ ಡಾ.ಕೆ.ಸುಧಾಕರ್ ಅವರನ್ನು ಗೆಲುವಿನ ದಡ ಸೇರುವಂತೆ ಮಾಡಿದೆ.
ಮತ್ತೊಂದು ಕಡೆ ಕಾಂಗ್ರೆಸ್ ಅಹಿಂದ ಮತಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ಪ್ರಮುಖವಾಗಿ ನೆಚ್ಚಿಕೊಂಡಿತ್ತು. ಆದರೆ ಹಿಂದುಳಿದ ವರ್ಗಗಳ ಮತಗಳನ್ನು ಕ್ರೋಡೀಕರಿಸುವಲ್ಲಿ, ಅಹಿಂದ ಸೇರಿದಂತೆ ಇತರೆ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಫಲರಾದರು.
ಹೀಗೆ ತಮಗೆ ದೊರೆತ ಪ್ರತಿ ಅವಕಾಶಗಳನ್ನು ಡಾ.ಕೆ.ಸುಧಾಕರ್ ಸದ್ಬಳಕೆ ಮಾಡಿಕೊಳ್ಳುತ್ತ ನಡೆದರೆ, ಕಾಂಗ್ರೆಸ್ ಇದಕ್ಕೆ ವ್ಯತಿರಿಕ್ತವಾಗಿ ಮುನ್ನಡೆಯಿತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗಟ್ಟಿಬೇರುಗಳಿದ್ದರೂ ಕಾಂಗ್ರೆಸ್ಗೆ ಗೆಲುವು ಸಾಧ್ಯವಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.