ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಸುವ್ಯವಸ್ಥೆ ಕಾಪಾಡಿಕೊಂಡು ಸೋಂಕಿತರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕೇಂದ್ರದಿಂದ ಮಂಗಳವಾರ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ನಿಯೋಜಿತ ಸಿಬ್ಬಂದಿಯೊಂದಿಗೆ ವಿಡಿಯೊ ಸಂವಾದ ನಡೆಸಿ, ಮಾತನಾಡಿದರು.
‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯ ಎಲ್ಲ ಕ್ರಮಗಳು ಜಿಲ್ಲೆಯಲ್ಲಿ ತೀವ್ರಗೊಳ್ಳಬೇಕು. ಮಾಸ್ಕ್ ಬಳಕೆ, ಅಂತರ ಪಾಲನೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ಜಿಲ್ಲಾಡಳಿತದ ಜತೆಗೆ ಸಮರ್ಪಕ ಕಾರ್ಯನಿರ್ವಹಣೆ ಮಾಡಬೇಕು’ ಎಂದು ತಿಳಿಸಿದರು.
‘ಕೊರೊನಾ ವೈರಾಣು ಹರಡುವುದು ತಡೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬರುವ ಅನುದಾನ ಸಮರ್ಪಕ ಬಳಕೆ ಮಾಡಬೇಕು. ರೋಗಿಗಳಿಗೆ, ಕ್ವಾರಂಟೈನದಲ್ಲಿರುವವರಿಗೆ ಉತ್ತಮ ಚಿಕಿತ್ಸೆ ಮತ್ತು ಸೌಕರ್ಯ ನೀಡಬೇಕು’ ಎಂದರು.
‘ಕೊವಿಡ್ ತಡೆಗೆ ನಿಯೋಜಿಸಲಾದ ಕಾರ್ಯಪಡೆ ಸೇರಿದಂತೆ ರಚಿಸಲಾಗಿರುವ ಎಲ್ಲಾ ತಂಡಗಳು, ಮತ್ತಷ್ಟು ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಕೋವಿಡ್-19 ನಿಯಂತ್ರಣಕ್ಕೆ ಇನ್ಮುಂದೆಯೂ ಯುದ್ದೋಪಾದಿಯಲ್ಲಿ ಕೆಲಸ ಮಾಡಬೇಕು’ ಎಂದು ಹೇಳಿದರು.
‘ಜನರ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಅಧಿಕಾರಿಗಳು, ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು, ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ಉತ್ತಮ ರೀತಿಯ ವ್ಯವಸ್ಥೆ ಕೈಗೊಳ್ಳಬೇಕು. ಸೋಂಕಿತರಲ್ಲಿ ಆತ್ಮ ಸ್ಥೈರ್ಯ ತುಂಬಬೇಕು’ ಎಂದು ತಿಳಿಸಿದರು.
‘ಪ್ರತಿಯೊಬ್ಬ ಸೋಂಕಿತರ ಬಗ್ಗೆ ನಿಗಾ ವಹಿಸುವ ಜತೆಗೆ ಆಹಾರ ಪೂರೈಕೆ, ಚಿಕಿತ್ಸಾ ಸೌಲಭ್ಯ, ಸ್ವಚ್ಚತೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಲೋಪದೋಷಗಳು ಆಗದಂತೆ ಕ್ರಮವಹಿಸಬೇಕು. ಮತ್ತಷ್ಟು ಮುಂಜಾಗ್ರತ ಕ್ರಮ ಕೈಗೊಳ್ಳಬೇಕು’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಭಾಗವಹಿಸಿದ್ದರು.