ಚಿಕ್ಕಬಳ್ಳಾಪುರ: ಪಂಚಾಯತ್ ರಾಜ್ ದಿವಸ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿವಿಧ ರಾಜ್ಯಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರೊಂದಿಗೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದರು. ಇದೇ ವೇಳೆ ಮೋದಿ ಅವರು ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎಂ.ನವೀನ್ ಕುಮಾರ್ ಅವರೊಂದಿಗೆ ಮಾತನಾಡಿದರು.
ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ವಿಡಿಯೊ ಸಂವಾದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 11 ರಿಂದ ಸುಮಾರು 30 ನಿಮಿಷ ನಡೆದ ಪ್ರಧಾನಿ ಅವರ ವಿಡಿಯೊ ಕಾನ್ಫರೆನ್ಸ್ನಲ್ಲಿ ಮೋದಿ ಅವರು ನವೀನ್ ಕುಮಾರ್ ಅವರೊಂದಿಗೆ ಸುಮಾರು ಆರು ನಿಮಿಷಗಳು ಸಂವಾದ ನಡೆಸಿದರು.
ಈ ವೇಳೆ ನವೀನ್ ಕುಮಾರ್ ಅವರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಹಿಂದಿಯಲ್ಲಿ ಮಾತು ಆರಂಭಿಸಿ, ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ನವೀನ್ ಕುಮಾರ್ ಅವರು ಬಳಿಕ ಕನ್ನಡದಲ್ಲಿ ಮಾತನಾಡಿದರು. ಅವರು ಹೇಳಿದ್ದನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಹಿಂದಿಗೆ ಭಾಷಾಂತರಿಸಿದರು.