ಚಿಕ್ಕಬಳ್ಳಾಪುರ: ಎರಡು ವರ್ಷಗಳಿಂದ ಖಾಲಿ ಇದ್ದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಂ.ಮುನೇಗೌಡ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ಬೆಂಗಳೂರಿನಲ್ಲಿ ಮುನೇಗೌಡ ಅವರಿಗೆ ನೇಮಕಾತಿ ಆದೇಶ ಪತ್ರ ನೀಡುವ ಮೂಲಕ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸಿದರು.
ಈ ವೇಳೆ ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಜಾಕಾಂತ್, ಮುಖಂಡ ಮೇಲೂರು ರವಿಕುಮಾರ್ ಹಾಜರಿದ್ದರು.
ಈ ಹಿಂದೆ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಕೆ.ವಿ.ನಾಗರಾಜ್ ಅವರು 2018ರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಅಂದಿನಿಂದ ಸುಮಾರು ಎರಡು ವರ್ಷಗಳ ಕಾಲ ಅಧ್ಯಕ್ಷ ಹುದ್ದೆ ಖಾಲಿಯಾಗಿತ್ತು.
ಇದೀಗ ನಂದಿ ಕ್ಷೇತ್ರದ ಸದಸ್ಯ ಮುನೇಗೌಡ ಅವರಿಗೆ ಜಿಲ್ಲೆಯಲ್ಲಿ ಪಕ್ಷ ಮುನ್ನಡೆಸುವ ಹೊಣೆಗಾರಿಕೆ ವಹಿಸಿರುವುದು ಪಕ್ಷಾಂತರದಿಂದ ನಲುಗಿ, ನಿಸ್ತೇಜಗೊಂಡಿದ್ದ ಪಕ್ಷದೊಳಗೆ ಸಂಚಲನ ಮೂಡಿಸಿದೆ.