ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಮತದಾರರ ದಿನಾಚರಣೆ

Last Updated 26 ಜನವರಿ 2022, 3:18 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆಹನುಮಂತಪ್ಪ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಕಂದಾಯ ಇಲಾಖೆಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ಇರುವ ವ್ಯವಸ್ಥೆಯೇ ಮತದಾನ. ಮತದಾನ ದೇಶದ ಪ್ರಜೆಗಳ ಪ್ರಮುಖ ಹಕ್ಕು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳುಹಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಎಂದರು.

ಯುವಜನತೆ ಪ್ರತಿವರ್ಷ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವ ಬಲಗೊಳ್ಳಬೇಕಾದರೆ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯ. ದೇಶ ಅಭಿವೃದ್ಧಿಯಾಗಬೇಕಾದರೆ ನಾವು ನಮ್ಮ ಆಯ್ಕೆಯನ್ನು ಅಮೂಲ್ಯ ಮತದಾನದ ಮೂಲಕ ವ್ಯಕ್ತಪಡಿಸಬೇಕು ಎಂದು ಹೇಳಿದರು.

‘ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಯ ಘನತೆಯನ್ನು ಎತ್ತಿಹಿಡಿಯುತ್ತೇವೆ. ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ’ ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆಯುತ್ತಿರುವ ಯುವಜನರಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ. ಪಚ್ಚಾಪುರೆ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಚಂದ್ರಶೇಖರಗೌಡ, ಕಾರ್ಯದರ್ಶಿ ಲೋಕೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ನಗರಸಭೆ ಪೌರಾಯುಕ್ತ ಆರ್. ಶ್ರೀಕಾಂತ್, ತಹಶೀಲ್ದಾರ್ ಬಿ.ಎಸ್. ರಾಜೀವ್, ಎನ್‌ಎಸ್‌ಎಸ್ ಶಿಕ್ಷಕ ಮುನಿರಾಜು, ಸಿಡಿಪಿಒ ಮಹೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT