ಹಾಸನ: ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು, ದಾಹ ನೀಗಿಸಿಕೊಳ್ಳಲು ಜನರು ಕಲ್ಲಂಗಡಿ, ಸೌತೆಕಾಯಿ, ಎಳನೀರು ಹಾಗೂ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ.ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು ವಿವಿಧ ಹಣ್ಣುಗಳು, ತಂಪು ಪಾನೀಯ ಅಂಗಡಿಗಳಿಗೆ ಮುಗಿ ಬೀಳುತ್ತಿದ್ದಾರೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗುತ್ತಿದ್ದು, ಗರಿಷ್ಠ 35 ಡಿಗ್ರಿ ತಲುಪಿದೆ. ಇದರಿಂದಾಗಿ ಕಲ್ಲಂಗಡಿ, ಸೌತೆಕಾಯಿ, ಐಸ್ಕ್ರೀಮ್, ಕಬ್ಬಿನ ರಸ, ಎಳನೀರು ಮಾರಾಟ ಜೋರಾಗಿದೆ. ನಗರದ ಡೇರಿ ವೃತ್ತ, ಸಹ್ಯಾದ್ರಿ ವೃತ್ತ, ಹಾಸನಾಂಬ ಕಲಾಕ್ಷೇತ್ರ ಮುಂಭಾಗ, ಬಿ.ಎಂ. ರಸ್ತೆ, ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ರಾಶಿಗಟ್ಟಲೆ ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದು, ಜನರು ಚೌಕಸಿ ಮಾಡಿ ಖರೀದಿಸುತ್ತಿದ್ದಾರೆ. ಇದರಿಂದಾಗಿ ಬೆಲೆಯೂ ಏರಿಕೆಯಾಗಿದೆ.