ಚಿಂತಾಮಣಿ: ತಾಲ್ಲೂಕಿನ ಮಡಬಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ದಲಿತ ಮಹಿಳೆಗೆ ಭೂ ಮಂಜೂರಾತಿ ಪತ್ರ ನೀಡಬೇಕು ಹಾಗೂ ಅವರ ಕುಟುಂಬದ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಭೀಮ ಮಾರ್ಗ ಸಂಘಟನೆಯು ತಹಶೀಲ್ದಾರ್ಗೆ ಮನವಿ ಮಾಡಿದೆ.
ಕೈವಾರ ಹೋಬಳಿ ಮಡಬಹಳ್ಳಿ ಗ್ರಾಮದಲ್ಲಿ ಉಮಾದೇವಿ ಎಂಬ ದಲಿತ ಮಹಿಳೆ 2006ರಿಂದಲೂ ಜಮೀನನ್ನು ಸಾಗುವಳಿ ಮಾಡುತ್ತಿದ್ದಾರೆ. ಆದರೆ, ಈಚೆಗೆ ಕೆಲವರು ಜಮೀನಿನಲ್ಲಿ ಮಣ್ಣು ತೆಗೆದು ಸಾಗಿಸಿದ್ದಾರೆ. ಕೇಳಿದ್ದಕ್ಕೆ ಮಹಿಳೆ ಮತ್ತು ಕುಟುಂಬದ ಮೇಲೆ ಹಲ್ಲೆ ನಡೆಸಿದ್ದರು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ ದಲಿತಪರ ಸಂಘಟನೆಗಳು ನಗರದ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿ 4- 5 ತಿಂಗಳು ಕಳೆದರೂ ಪ್ರಯೋಜನವಾಗಿಲ್ಲ. ಉಮಾದೇವಿ ನಮೂನೆ 53ರ ಅಡಿ ಅರ್ಜಿ ಸಲ್ಲಿಸಿದ್ದರೂ ಹಕ್ಕುಪತ್ರ ನೀಡಿಲ್ಲ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಐ.ಆರ್.ನಾರಾಯಣಸ್ವಾಮಿ ಆರೋಪಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಹನುಮಂತರಾಯಪ್ಪ, ದಾಖಲೆಗಳನ್ನು ಪರಿಶೀಲಿಸಿ ಕಾನೂನಿಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅನಿಲ್ ಕುಮಾರ್, ಬಿಡಗಾನಹಳ್ಳಿ ರಾಮಾಂಜನಪ್ಪ, ಉಮಾದೇವಿ ಹಾಗೂ ಕುಟುಂಬದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.