ಗುಡಿಬಂಡೆ: ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಜಾ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರಜಾ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮೂಲಕ ಬಹುರಾಷ್ಟ್ರೀಯ ಕಂಪನಿಗಳ ಹಾಗೂ ರಿಯಲ್ ಎಸ್ಟೇಟ್ ದಂಧೆಕೋರರಿಗೆ ಅನುಕೂಲ ಮಾಡಲು ಹೊರಟಿದೆ. ಇದರಿಂದ ಕೃಷಿಕರು ಭೂಮಿ ಕಳೆದುಕೊಂಡು ಬೀದಿಪಾಲಾಗುತ್ತಾರೆ ಎಂದು ದೂರಿದರು.
ಈಗಾಗಲೇ ಅನೇಕ ಭೂ ರಹಿತರರು ಫಾರಂ 57ರಲ್ಲಿ ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದ್ದಾರೆ. ಸುಮಾರು ಒಂದು ವರ್ಷದಿಂದ ಯಾವುದೇ ಅರ್ಜಿಯನ್ನು ಸಹ ವಿಲೇವಾರಿ ಮಾಡಿಲ್ಲ. ಭೂ ಮಂಜೂರಾತಿ ಸಮಿತಿ ರಚಿಸಿ ಅರ್ಹರಿಗೆ ಭೂಮಿ ಒದಗಿಸುವ ಕೆಲಸ ಆಗಬೇಕು. ಲಾಕ್ಡೌನ್ ಕಾರಣ ಗ್ರಾಮೀಣ ಭಾಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ನಿರ್ವಹಣೆಗೆ ಅರ್ಥಿಕ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.
ಜಿ.ವಿ.ಶ್ರೀರಾಮರೆಡ್ಡಿ ನೇತೃತ್ವದಲ್ಲಿ ನೂರಾರು ಜನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹೊರಟ ಕಾರ್ಯಕರ್ತರು ಬಾವುಟಗಳನ್ನು ಹಿಡಿದು, ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿದರು.