ಚಿಕ್ಕಬಳ್ಳಾಪುರ: ಬಿಸಿಯೂಟದ ವಿಚಾರವಾಗಿ ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯರು ಹಾಗೂ ಬಿಸಿಯೂಟ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
60 ವರ್ಷವಾಗಿರುವ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡುಗಂಟು ನೀಡಬೇಕು. ಮಾ.31 2022ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಏ.10 2022ಕ್ಕೆ ಮರು ಆದೇಶ ನೀಡಬೇಕು.
ಬಜೆಟ್ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿರುವ ₹ 1 ಸಾವಿರ ವೇತನವನ್ನು ಜ.2022ರಿಂದ ಪೂರ್ವಾನ್ವಯಗೊಳಿಸಬೇಕು. ಬಿಸಿಯೂಟ ಯೋಜನೆ ಕಾಯಂ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಶಿಕ್ಷಣ ಇಲಾಖೆ ಶಿಫಾರಸಿನ ಅನ್ವಯ ವೇತನ ಹೆಚ್ಚಳ ಮಾಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು. ಶಾಲಾಅವಧಿ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ನೀಡಬೇಕು. ನರೇಗಾ ಯೋಜನೆಯಡಿ ವೇತನ ನೀಡಬೇಕು. ಬಿಸಿಯೂಟ ನೌಕರರನ್ನು ಕಾಯಂಗೊಳಿಸಿ ಶಾಸನಾತ್ಮಕ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳ 5ನೇ ತಾರೀಕಿನ ಒಳಗೆ ವೇತನ ನೀಡಬೇಕು. ನೇರವಾಗಿ ಶಿಕ್ಷಣ ಇಲಾಖೆಯಡಿ ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಶಾಲೆಯಲ್ಲಿ ಇಬ್ಬರು ಅಡುಗೆ ಸಿಬ್ಬಂದಿ ನೇಮಿಸಬೇಕು ಎಂದರು.
ಸಂಘಟನೆ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಖಜಾಂಚಿ ರಾಜಮ್ಮ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಮುನಿಲಕ್ಷ್ಮಮ್ಮ, ಚಂದ್ರಕಲಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಸಿಯೂಟ ಸಿಬ್ಬಂದಿ ಭಾಗಿಯಾಗಿದ್ದರು.