ಗುಡಿಬಂಡೆ: ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೆಡಿಎಸ್ ಘಟಕದಿಂದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಬಡಜನರ, ರೈತರ ಹಾಗೂ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತೇವೆ ಎಂದ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದಿನನಿತ್ಯ ಕೂಲಿ ಮಾಡಿ ಜೀವನ ನಡೆಸುವ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ ಇರುವ ಸಮಸ್ಯೆಗಳನ್ನು ಬಗೆಹರಿಸದೇ ಇತರೆ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಇದನ್ನು ಬಿಟ್ಟು ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡುವತ್ತ ಸರ್ಕಾರ ಗಮನಹರಿಸಬೇಕು ಎಂದರು.
ತಾಲ್ಲೂಕು ಕಾರ್ಯದರ್ಶಿ ಅಪ್ಸರ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡವರ ಪಾಲಿಗೆ ಉಪಯುಕ್ತವಾದ ಯಾವುದೇ ಪ್ಯಾಕೇಜ್ ನೀಡಿಲ್ಲ. ರಾಜ್ಯ ಸರ್ಕಾರ ಕೆಲವು ವರ್ಗಗಳ ಜನತೆಗೆ ಪ್ಯಾಕೇಜ್ ನೀಡಿದೆಯಾದರೂ ಆ ಪರಿಹಾರ ಏನಕ್ಕೂ ಸಾಲುವುದಿಲ್ಲ. ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಮುರಳಿಕೃಷ್ಣ, ಮುಖಂಡ ರಾಜಣ್ಣ, ನಾಗರಾಜು, ಗಾಂಧಿ ಶ್ರೀನಿವಾಸ, ಪಾಪಿರೆಡ್ಡಿ, ಆದಿನಾರಾಯಣಪ್ಪ, ಶ್ರೀನಿವಾಸ, ಗಂಗರಾಜು, ಪ್ರಶಾಂತ್, ಮಹೇಶ್, ಬಾಲಾಜಿ, ರಮೇಶ್ ಇದ್ದರು.