ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳನ್ನು ವಿಶ್ವಮಾನವರನ್ನಾಗಿ ಬೆಳೆಸಿ

ಅಗಲಗುರ್ಕಿಯ ಬಿಜಿಎಸ್ ಇಂಗ್ಲಿಷ್ ಶಾಲೆಯ ನರ್ಸರಿ ವಿಭಾಗದ ವಾರ್ಷಿಕೋತ್ಸವ
Last Updated 2 ಫೆಬ್ರುವರಿ 2020, 13:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮಕ್ಕಳು ಬರೀ ಶಾಲೆಯಲ್ಲಿ ಕಲಿತರೇ ಸಾಲದು. ಮನೆಯಲ್ಲಿ ಕೂಡ ಕಲಿಯಬೇಕಾದ್ದದ್ದು ಬಹಳಷ್ಟಿದೆ. ಅದಕ್ಕಾಗಿ ಪೋಷಕರು ಮನೆಯಲ್ಲಿ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸಿ ಮಕ್ಕಳ ಜ್ಞಾನಾರ್ಜನೆಗೆ ಒತ್ತು ನೀಡಬೇಕು’ ಎಂದು ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಲಾ ಮಠದ ಮಂಗಳನಾಥ ಸ್ವಾಮೀಜಿ ಹೇಳಿದರು.

ನಗರ ಹೊರವಲಯದ ಅಗಲಗುರ್ಕಿಯ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ನರ್ಸರಿ ವಿಭಾಗದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಕ್ಕಳು ವಿಶ್ವಮಾನವರಾಗಿ ಜನಿಸುತ್ತಾರೆ. ಬೆಳೆಯುತ್ತ ಪರಿಸರದ ಪ್ರಭಾವದಿಂದಾಗಿ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳುತ್ತಿದ್ದರು. ಆದ್ದರಿಂದ, ಶಿಕ್ಷಣ ಮತ್ತು ಸಮಾಜ ಮಕ್ಕಳನ್ನು ವಿಶ್ವಮಾನವರಾಗಿಯೇ ಬೆಳೆಯುವಂತಹ ವಾತಾವರಣ ಕಲ್ಪಿಸಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ತಮ್ಮಲ್ಲಿರುವ ಕೆಟ್ಟ ಬುದ್ಧಿಯನ್ನು ತೊರೆದು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು. ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಮಕ್ಕಳಿಗೆ ಒಂದು ನಿರ್ದಿಷ್ಠ ಗುರಿ ಇರಬೇಕು. ಆ ಗುರಿ ಮುಟ್ಟಲು ಪೋಷಕರು ಸಹಕಾರ ನೀಡಬೇಕು. ಮಕ್ಕಳಿಗೆ ಪೋಷಕರು ಒಳ್ಳೆಯ ವಾತಾವರಣವನ್ನು ಕಲ್ಪಿಸಿದಾಗ ಅವರು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬೆಳೆಯಲು ಸಹಾಯವಾಗುತ್ತದೆ. ಬಿಜಿಎಸ್‌ ಶಾಲೆಗಳಲ್ಲಿ ಶಿಕ್ಷಣದ ಜತೆಗೆ ಸಂಸ್ಕಾರ ಕೊಡುವುದು ಒಂದು ವಿಶೇಷ. ಆದ್ದರಿಂದ ನಿಮ್ಮ ಮಕ್ಕಳು ಇಂತಹ ಶಾಲೆಯಲ್ಲಿ ಓದುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದು ಹೇಳಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಮಾತನಾಡಿ, ‘ಮಕ್ಕಳ ಜ್ಞಾನವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಮಕ್ಕಳು ಹುಟ್ಟಿದ ತಕ್ಷಣ ಕನಸನ್ನು ಕಾಣುತ್ತಾರೆ. ಆ ಕನಸುಗಳನ್ನು ನನಸು ಮಾಡಲು ಪೋಷಕರು ಉತ್ತಮ ವಾತಾವರಣವನ್ನು ಕಲ್ಪಿಸಬೇಕು. ಇಲ್ಲವಾದಲ್ಲಿ ಕನಸುಗಳು ಈಡೇರುವುದಿಲ್ಲ. ಮನೆಯಲ್ಲಿ ಪೋಷಕರೂ ಉತ್ತಮವಾದ ಅಭ್ಯಾಸಗಳನ್ನು ರೂಢಿಸಿಕೊಂಡಾಗ ಅವುಗಳನ್ನು ಮಕ್ಕಳು ಅನುಕರಣೆ ಮಾಡುತ್ತಾರೆ. ಆದ್ದರಿಂದ, ಪೋಷಕರು ಮನೆಯಲ್ಲಿ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಮಕ್ಕಳಿಗೆ ಮನೆಯಲ್ಲಿ ಓದುವ ವಾತಾವರಣವನ್ನು ಕಲ್ಪಿಸಿದರೆ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರಹೊಮ್ಮುತ್ತಾರೆ. ಮಕ್ಕಳು ನಿಮ್ಮ ಮುಂದೆ ದೊಡ್ಡ ವ್ಯಕ್ತಿಗಳಾಗುತ್ತೇವೆ ಎಂದು ಹೇಳಿದಾಗ ಅವರನ್ನು ಹುರಿದುಂಬಿಸಬೇಕೆ ಹೊರತು ಕಡೆಗಣಿಸಬಾರದು. ಮಾವಿನ ಮರಗಳನ್ನು ನೆಟ್ಟಿದಾಗ ಅದರಲ್ಲಿ ಬರುವ ಫಲಗಳು ಅತ್ಯುತ್ತಮವಾಗಿರುತ್ತವೆ. ಅಲ್ಲಿಯವರೆಗೂ ನಾವು ಕಾಯಬೇಕಷ್ಟೇ’ ಎಂದರು.

ಕಾರ್ಯಕ್ರಮದಲ್ಲಿ 100 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಾಲೆಯ ಮುಖ್ಯಶಿಕ್ಷಕ ಡಿ.ಸಿ.ಮೋಹನ್ ಕುಮಾರ್, ಶಿಡ್ಲಘಟ್ಟ ಬಿಜಿಎಸ್ ಪಿ.ಯು ಕಾಲೇಜಿನ ಪ್ರಾಂಶುಪಾಲ ಮಹದೇವ್, ಬಿಜಿಎಸ್ ವಿದ್ಯಾರ್ಥಿ ನಿಲಯದ ನಿಲಯಪಾಲಕ ಎಚ್.ಎಂ ರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT