ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಸಂಕಷ್ಟದ ನಡುವೆ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಆನ್ಲೈನ್ ಬೋಧನೆ ಮತ್ತು ಪದವಿ ಆನ್ಲೈನ್ ಪರೀಕ್ಷೆ ನಡೆಸುವುದು ಮುಂದೂಡಬೇಕು ಎಂದು ಆಗ್ರಹಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಎನ್ಎಸ್ಯುಐ ಕಾರ್ಯಕರ್ತರು ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಎನ್ಎಸ್ಯುಐ ರಾಜ್ಯ ಘಟಕದ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ‘ಇವತ್ತು ಇಡೀ ವಿಶ್ವದಲ್ಲಿ ಕೋವಿಡ್ 19 ಆವರಿಸಿದೆ. ಇದರಿಂದ ದೇಶದಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಆನ್ಲೈನ್ ಬೋಧನೆ ಮತ್ತು ಆನ್ಲೈನ್ ಪರೀಕ್ಷೆ ನಡೆಸಲು ಮುಂದಾಗಿರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಾನುಕೂಲ ಉಂಟು ಮಾಡಲಿದೆ’ ಎಂದು ಹೇಳಿದರು.
‘ಸಾಕಷ್ಟು ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್ಗಳಿಲ್ಲ, ಅನೇಕ ಹಳ್ಳಿಗಳಲ್ಲಿ ಇಂದಿಗೂ ನೆಟ್ವರ್ಕ್ ಸಮಸ್ಯೆ ಇದೆ. ಆದ್ದರಿಂದ ಆನ್ಲೈನ್ ಬೋಧನೆ ಮತ್ತು ಪದವಿ ಆನ್ಲೈನ್ ಪರೀಕ್ಷೆ ಮುಂದೂಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಎನ್ಎಸ್ಯುಐ ಮುಖಂಡರಾದ ದೀಲಿಪ್ ರಾಜ್, ಜಯಂತ್ ಕುಮಾರ್, ಕೃಷ್ಣ ಹಾಜರಿದ್ದರು.