ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಲತಾ ಅವರನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಅವರು ಸ್ವಾಗತಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಲತಾ ಅವರು, ‘ಚಿಕ್ಕಬಳ್ಳಾಪುರ ಜಿಲ್ಲೆ ಬರ ಪೀಡಿತ ಪ್ರದೇಶವಾಗಿದ್ದು, ನೀರಿನ ಸಮಸ್ಯೆ ತಲೆದೋರಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಜಿಲ್ಲೆಯಲ್ಲಿ ನೀರು ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುತ್ತೇನೆ. ಶಿಕ್ಷಣ ಕ್ಷೇತ್ರ, ಕೃಷಿಗೆ ಆದ್ಯತೆ ನೀಡಲಾಗುವುದು’ ಎಂದರು.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ್ ಶ್ರವಣ್ ಅವರ ಜಾಗಕ್ಕೆ ಸರ್ಕಾರ ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿದ್ದ ಕೆ.ಎನ್.ರಮೇಶ್ ಅವರನ್ನು ವರ್ಗ ಮಾಡಿತ್ತು. ಆದರೆ ರಮೇಶ್ ಅವರು ಅಧಿಕಾರ ಸ್ವೀಕರಿಸಿರಲಿಲ್ಲ.
ಈ ನಡುವೆ ಸರ್ಕಾರ ರಮೇಶ್ ಅವರ ವರ್ಗಾವಣೆ ರದ್ದುಪಡಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲತಾ ಅವರನ್ನು ಆ.27ರಂದು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿತ್ತು.