ಗುಡಿಬಂಡೆ: ಲಾಕ್ಡೌನ್ ಕಾರಣ ಖಾಸಗಿ ಶಾಲೆಗಳಲ್ಲಿನ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ಆಡಳಿತ ಮಂಡಳಿಗಳು ಸಂಕಷ್ಟಕ್ಕೀಡಾಗಿದ್ದು, ಕೂಡಲೇ ಸರ್ಕಾರ ಖಾಸಗಿ ಶಾಲೆಗಳ ನೆರವಿಗೆ ಧಾವಿಸಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟದ ತಾಲ್ಲೂಕು ಘಟಕ ಮನವಿ ನೀಡಿದೆ.
ಒಕ್ಕೂಟದ ತಾಲ್ಲೂಕು ಅಧ್ಯಕ್ಷ ರಾಮಾಂಜಿನೇಯ ಮಾತನಾಡಿ, ಶೈಕ್ಷಣಿಕ ಉನ್ನತಿಗಾಗಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಆದರೂ ಅವರಿಗಾಗಿ ಒಂದು ಪ್ಯಾಕೇಜ್ ಘೋಷಣೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಶಿಕ್ಷಕ ವೃತ್ತಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಖಾಸಗಿ ಶಾಲೆಗಳ ಶಿಕ್ಷಕ ಹಾಗೂ ಸಿಬ್ಬಂದಿಗೆ ಸಂಕಷ್ಟ ಎದುರಾಗಿದೆ. ಅನುದಾನ ರಹಿತ ಆಡಳಿತ ಮಂಡಳಿಗೆ ಶಿಕ್ಷಣ ಇಲಾಖೆ ಆರ್ಟಿಇ ಬಾಕಿಯನ್ನೂ ಪಾವತಿಸದೆ ಇರುವುದರಿಂದ ಶಿಕ್ಷಕರ ವೇತನ ನೀಡಲು ಸಾಧ್ಯವಾಗಿಲ್ಲ. ಆದ್ದರಿಂದ ಕೂಡಲೇ ಸರ್ಕಾರ ಕೂಡಲೇ ಆರ್ಟಿಇ ಹಣ ಬಿಡುಗಡೆ ಮಾಡಬೇಕು’ ಎಂದು ಮನವಿ ಸಲ್ಲಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಪ್ರಸನ್ನಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಖಾಸಗಿ ಶಾಲೆಗಳ ಒಕ್ಕೂಟದ ತಾಲ್ಲೂಕು ಕಾರ್ಯದರ್ಶಿ ನಿರಂಜನ್, ಸದಸ್ಯರಾದ ಪ್ರದೀಪ್ ಕುಮಾರ್, ವೆಂಕಟೇಶ್, ನಾಗಭೂಷಣರಾವ್, ಖಲೀಲ್ ಇದ್ದರು.