ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಡಿ.20 ರಂದು ಸಿಎಂ ಮನೆಗೆ ಮುತ್ತಿಗೆ

Last Updated 17 ಡಿಸೆಂಬರ್ 2019, 12:37 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಡಿ.20 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು’ಎಂದು ಮಾದಿಗ ದಂಡೋರ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ಸಿ.ವಿ.ವೀಣಾ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮಾದಿಗ ಜನಾಂಗಕ್ಕೆ ರಾಜಕೀಯ, ಉದ್ಯೋಗ, ಶಿಕ್ಷಣ ಕ್ಷೇತ್ರದಲ್ಲಿ ಅನ್ಯಾಯವಾಗುತ್ತಿದೆ. ಸರ್ಕಾರದ ಸಾಲ ಸೌಲಭ್ಯ, ವಸತಿ ಯೋಜನೆ ಯಲ್ಲಿ ಸಮುದಾಯದವರಿಗೆ ಮೋಸ ವಾಗುತ್ತಿದೆ. ಪರಿಶಿಷ್ಟ ಜಾತಿಯಲ್ಲಿಯೂ ಹಿಂದುಳಿದಿರುವ ಮಾದಿಗ ಜನರ ಕಲ್ಯಾಣಕ್ಕೆ ಪೂರಕವಾಗಿರುವ ಸದಾಶಿವ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮುಖಂಡರು ನೀಡಿದ್ದ ಭರವಸೆಯನ್ನು ಈಡೇರಿಸ ಬೇಕು’ ಎಂದು ಒತ್ತಾಯಿಸಿದರು.

‘ಸದಾಶಿವ ಆಯೋಗದ ವರದಿ ಜಾರಿ ವಿಚಾರದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಮೂರೂ ಪಕ್ಷಗಳು ನಿರ್ಲಕ್ಷ್ಯ ತೋರಿವೆ. ಮಾದಿಗರ ಅಭಿವೃದ್ಧಿಗೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ. ದಲಿತರಲ್ಲಿ ಮುಂದುವರೆದವರಿಗೇ ಹೆಚ್ಚು ಅನುಕೂಲ ಆಗುತ್ತಿದೆ. ಮಾದಿಗರು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ’ ಎಂದು ಹೇಳಿದರು.

‘ರಾಜ್ಯ ಸರ್ಕಾರ ಕೂಡಲೇ ವರದಿ ಜಾರಿ ಮಾಡಿ ಶೈಕ್ಷಣಿಕ, ಉದ್ಯೋಗ, ರಾಜಕೀಯ ಕ್ಷೇತ್ರಗಳಲ್ಲಿ ಅಂತ್ಯಂತ ಹಿಂದುಳಿದ ಮಾದಿಗ ಸಮುದಾಯದವರಿಗೆ ಪರಿಶಿಷ್ಟ ಜಾತಿಗಳ ಸೌಲಭ್ಯಗಳನ್ನು ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತ ಇರುವುದರಿಂದ ರಾಜ್ಯ ಸರ್ಕಾರ ಕೂಡಲೇ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಸಮಿತಿ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು.

‘ಸದಾಶಿವ ಆಯೋಗ ಸತತ 7 ವರ್ಷಗಳ ಕಾಲ ರಾಜ್ಯದಲ್ಲಿ ಅಧ್ಯಯನ ನಡೆಸಿ, ವೈಜ್ಞಾನಿಕ ಆಧಾರಗಳ ಮೇಲೆ ಸಮಗ್ರ ವರದಿ ತಯಾರಿಸಿ 2012ರಲ್ಲಿಯೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಅದರ ಅನುಷ್ಠಾನದ ಬಗ್ಗೆ ಈವರೆಗೆ ಆಡಳಿತ ನಡೆಸಿದ ಒಬ್ಬರೂ ಕಾಳಜಿ ತೋರಲಿಲ್ಲ. ವರದಿ ಜಾರಿಗೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿ ಪಡಿಸುತ್ತಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ವರದಿ ಜಾರಿಗೆ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಮಾದಿಗ ದಂಡೋರ ಜಿಲ್ಲಾ ಘಟಕ ಅಧ್ಯಕ್ಷ ಎಂ.ವಿ ರಾಮಪ್ಪ, ಮುಖಂಡರಾದ ರಾಮಕೃಷ್ಣ, ನರಸಿಂಹಪ್ಪ, ರಮೇಶ್, ಗೋಪಾಲ್, ಮುನಿವೆಂಕಟರಾಯಪ್ಪ, ನಾರಾಯಣಸ್ವಾಮಿ, ಧನಲಕ್ಷಿ, ಕದಿರಮ್ಮ, ಶ್ರೀನಿವಾಸ್, ಗಂಗಾಧರ್, ನಾರಾಯಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT