ಚಿಕ್ಕಬಳ್ಳಾಪುರ: ‘ಇವತ್ತು ಕೆಲವರಿಗೆ ಪಕ್ಷಕ್ಕಿಂತಲೂ ಹೆಚ್ಚಾಗಿ ಲೂಟಿ ಮಾಡಲು ಅಧಿಕಾರ ಬೇಕಾಗಿದೆ. ಕಾಂಗ್ರೆಸ್ನಲ್ಲಿ ಅಧಿಕಾರ ಸಿಕ್ಕಿದ್ದರೆ ಕೆಲವರು ರಾಜೀನಾಮೆ ಕೊಡುತ್ತಿರಲಿಲ್ಲ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಅದರ ಪ್ರತಿಫಲ ಏನು ಎಂಬುದು ಮುಂಬರುವ ಉಪ ಚುನಾವಣೆಯಲ್ಲಿ ಗೊತ್ತಾಗಲಿದೆ’ ಎಂದು ಮುಖಂಡ ನಂದಿ ಆಂಜಿನಪ್ಪ ತಿಳಿಸಿದರು.
ನಗರದ ಬಿ.ಬಿ.ರಸ್ತೆಯಲ್ಲಿ ಬುಧವಾರ ನೂತನವಾಗಿ ತೆರೆದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ಉದ್ಘಾಟನೆ ಹಾಗೂ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಪಕ್ಷದಿಂದ ಗೆದ್ದ ಕೆಲವರು ಜನರಿಗೆ ಗಾಂಧಿ ಟೋಪಿ ಹಾಕುವ ಬದಲು ಮಕ್ಮಲ್ ಟೋಪಿ ಹಾಕಿ ಅಧಿಕಾರ ಅನುಭವಿಸಿ ಶ್ರೀಮಂತರಾಗಿ, ಕೊನೆಗೆ ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ ಮಾಡಿದ್ದಾರೆ. ದ್ರೋಹ ಮಾಡಿದವರನ್ನು ಪಕ್ಷ ಹೊರ ಹಾಕಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಗಾಂಧೀಜಿ ಅವರು ಕಾಂಗ್ರೆಸ್ಗಾಗಿ ಹಾಗೂ ಸ್ವಾತಂತ್ರ್ಯ ಹೋರಾಟ ಮುಂಚೂಣಿ ನಾಯಕರಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಅವರ 150ನೇ ಜನ್ಮ ದಿನದಂದೇ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ಉದ್ಘಾಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬಾಪೂಜಿಯವರ ಕನಸು ನನಸು ಮಾಡಲು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತೇವೆ’ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವ ರೆಡ್ಡಿ ಮಾತನಾಡಿ, ‘ಚಿಕ್ಕಬಳ್ಳಾಪುರ ಉಪ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ನಲ್ಲಿ ಐದು ಜ ಆಕಾಂಕ್ಷಿಗಳಿದ್ದಾರೆ. ಆ ಪೈಕಿ ಒಬ್ಬ ಸ್ಥಳಿಯ ಅಭ್ಯರ್ಥಿಯನ್ನೇ ಆಯ್ಕೆ ಮಾಡಲಾಗುತ್ತದೆ. ಪಕ್ಷ ಆಯ್ಕೆ ಮಾಡಿದ ಅಭ್ಯರ್ಥಿ ಪರವಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಗೆಲ್ಲಿಸುವ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು.
ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಅನಸೂಯಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್.ಪ್ರಕಾಶ್, ಮುಖಂಡರಾದ ಯಲುವಹಳ್ಳಿ ರಮೇಶ್, ಗಂಗರೇಕಾಲುವೆ ನಾರಾಯಣಸ್ವಾಮಿ, ಮುನೇಗೌಡ, ಅಡ್ಡಗಲ್ ಶ್ರೀಧರ್, ವಕೀಲ ನಾರಾಯಣಸ್ವಾಮಿ, ಮುನಿಕೃಷ್ಣಪ್ಪ, ಮುನೀಂದ್ರ, ಸುನೀಲ್ ಕುಮಾರ್ ಹಾಜರಿದ್ದರು.