ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಂಚಣಿ ಯೋಜನೆ ಪ್ರಯೋಜನ ಪಡೆಯಿರಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಪಿಂಚಣಿ ಯೋಜನೆ ಪ್ರಚಾರಕ್ಕೆ ಚಾಲನೆ
Last Updated 24 ನವೆಂಬರ್ 2020, 3:44 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಪಿಂಚಣಿ ಯೋಜನೆಯನ್ನು ಅಧಿಕಾರಿಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಜತೆಗೆ ಈ ಯೋಜನೆ ಕುರಿತು ವ್ಯಾಪಕ ಪ್ರಚಾರ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯಿಂದ ಆಯೋಜಿಸಿದ್ದ ಪಿಂಚಣಿ ಯೋಜನೆ ಕುರಿತು ಅರಿವು ಮೂಡಿಸುವ ಸಂಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಹಮಾಲಿಗಳು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ಆಟೊ ಚಾಲಕರು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ’ ಎಂದು ತಿಳಿಸಿದರು.

‘ಈ ಯೋಜನೆಯು 18 ರಿಂದ 40 ವರ್ಷದವರಿಗೆ ಮಾತ್ರ ಅನ್ವಯವಾಗುತ್ತದೆ. ₹ 55 ರಿಂದ ₹ 200 ಪ್ರತಿ ತಿಂಗಳು ವಂತಿಗೆ ಪಾವತಿಸಬೇಕು. ಒಬ್ಬ ವ್ಯಕ್ತಿ 30 ವರ್ಷವಾಗಿದ್ದರೆ ತಿಂಗಳಿಗೆ ₹ 100 ಪಾವತಿಸಬೇಕು. ಆತ 60 ವರ್ಷವಾದಾಗ ಪ್ರತಿವರ್ಷ ₹ 36 ಸಾವಿರ ಪಿಂಚಣಿ ಬರಲಿದೆ. ಒಂದು ವೇಳೆ ಪಿಂಚಣಿ ಪಡೆಯುವ ವ್ಯಕ್ತಿ ಮೃತಪಟ್ಟರೆ ಆತನ ಪತ್ನಿಗೆ ಶೇಕಡ 50ರಷ್ಟು ಪಿಂಚಣಿ ಸಿಗಲಿದೆ. ಹೀಗಾಗಿ ಅಸಂಘಟಿತ ಕಾಮಿರ್ಕಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

‘ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಯೋಜನೆಯ ಪ್ರಮುಖ ಅಂಶಗಳನ್ನೊಳಗೊಂಡ ಭಿತ್ತಿಪತ್ರಗಳು, ಬ್ಯಾನರ್‌ಗಳನ್ನು ಪ್ರತಿ ಇಲಾಖೆ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನಸಾಮಾನ್ಯರ ಗಮನಕ್ಕೆ ಬರುವಂತೆ ಹಾಕಬೇಕು. ಅಲ್ಲದೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಯೋಜನೆಯ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಮಾತನಾಡಿ, ‘ತಿಂಗಳಿಗೆ ₹15,000 ಅಥವಾ ಅದಕ್ಕಿಂತ ಕಡಿಮೆ ಆದಾಯ ಹೊಂದಿದವರು ಈ ಯೋಜನೆಗೆ ಅರ್ಹರು. ಫಲಾನುಭವಿಗಳು ಬ್ಯಾಂಕ್ ಉಳಿತಾಯ ಖಾತೆ ಹಾಗೂ ಆಧಾರ್ ಸಂಖ್ಯೆ ಹೊಂದಿರಬೇಕು. ಅರ್ಹ ಫಲಾನುಭವಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ವಿವರಗಳನ್ನು ಎಲ್‌ಐಸಿ ಶಾಖೆಗಳು, ಕಾರ್ಮಿಕ ಇಲಾಖೆ ಕಚೇರಿಗಳು, ಭವಿಷ್ಯನಿಧಿ ಇಲಾಖೆ ಕಚೇರಿ ಅಥವಾ http://locator.csccloud.in ಜಾಲತಾಣದಲ್ಲಿ ಪಡೆಯಬಹುದು’ ಎಂದರು.

‘ಯೋಜನೆಗೆ ನೋಂದಾಯಿತ ಫಲಾನುಭವಿಯ ವಯಸ್ಸು 60 ಪೂರ್ಣಗೊಂಡ ನಂತರ ತಿಂಗಳಿಗೆ ₹3000 ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಚಂದಾದಾರರು 10 ವರ್ಷದ ಒಳಗೆ ಯೋಜನೆಯಿಂದ ನಿರ್ಗಮಿಸಿದಲ್ಲಿ, ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ’ ಎಂದು ಹೇಳಿದರು.

ಕಾರ್ಮಿಕ ನಿರೀಕ್ಷಕರಾದ ಮಂಜುಳಾ, ಕಲಾವಾಣಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT