ಗುಡಿಬಂಡೆ: ತಂಬಾಕು ಉತ್ಪನ್ನಗಳ ಸೇವನೆಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪಟ್ಟಣದ ಮುಖ್ಯಬೀದಿಯಲ್ಲಿ ವಿದ್ಯಾರ್ಥಿಗಳೊಂದಿಗೆ ತೆರಳಿದ ವಿವಿಧ ಇಲಾಖೆಯ ಅಧಿಕಾರಿಗಳು ಗುಲಾಬಿ ಹೂ ನೀಡುವುದರ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತಂಬಾಕು ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಗುಲಾಬಿ ಆಂದೋಲನ ಜಾಥಾ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಪಟ್ಟಣದ ಮುಖ್ಯರಸ್ತೆಯಲ್ಲಿ ಸಂಚರಿಸಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ವ್ಯಾಪಾರಸ್ಥರಿಗೆ ಕರಪತ್ರ ವಿತರಿಸಿದರು. ತಂಬಾಕು ಉತ್ಪನ್ನಗಳನ್ನು ಮಾರದಂತೆ ಜಾಗೃತಿ ಮೂಡಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಮಾತನಾಡಿ, ಕೋಟ್ಟಾ ಕಾಯ್ದೆಯಡಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನಡಿ ಅಪರಾಧ. ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದು ಅಪರಾಧವಾಗಿದೆ ಎಂದು ಹೇಳಿದರು.
ಶಿಕ್ಷಣ ಇಲಾಖೆಯ ಟಿಪಿಒ ಪ್ರಕಾಶ್ ಮಾತನಾಡಿ, ತಂಬಾಕು ಸೇವನೆಯಿಂದ ಕೇವಲ ಒಬ್ಬ ವ್ಯಕ್ತಿಗೆ ಹಾನಿಯಾಗುವುದಿಲ್ಲ. ಇಡೀ ಸಮುದಾಯಕ್ಕೆ ಪರಿಣಾಮ ಬೀರುತ್ತದೆ. ತಂಬಾಕು ಸೇವನೆ ಕೈಬಿಟ್ಟು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ಇಸಿಒ ಚಂದ್ರಶೇಖರ್, ಆರೋಗ್ಯ ಇಲಾಖೆಯ ಸಿಬ್ಬಂದಿಯಾದ ನರಸಿಂಹಯ್ಯ, ಮುಬಾರಕ್, ಆರೋಗ್ಯ ರಕ್ಷಾ ಸಮಿತಿಯ ನಂಜುಂಡ, ನ್ಯೂ ಪಬ್ಲಿಕ್ ಶಾಲೆಯ ಪರಿಮಳಾ, ಮಂಜುಳಾ, ಕಲೀಲ್, ಅಂಬರೀಶ್ ಹಾಜರಿದ್ದರು.