ಶಿಡ್ಲಘಟ್ಟ : ತಾಲ್ಲೂಕಿನ ಕುದುಪಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಲಾಗಿದೆ.
ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುತ್ತಿರುವುದನ್ನು ಗ್ರಾಮಸ್ಥರು ವಿಡಿಯೊ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ಮುಖ್ಯಶಿಕ್ಷಕಿ ಬಿ.ರೇಣುಕಾ ಅವರನ್ನು ಅಮಾನತುಗೊಳಿಸಲಾಗಿದೆ.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಮುನಿರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಜಗದೀಶ್ ಸೋಮವಾರ ಶಾಲೆಗೆ ಭೇಟಿ ನೀಡಿದರು. ಮಕ್ಕಳು, ಶಿಕ್ಷಕಿ ಹಾಗೂ ಪೋಷಕರೊಂದಿಗೆ ಚರ್ಚಿಸಿ, ಹೇಳಿಕೆ ಪಡೆದರು.
‘ವಿದ್ಯಾರ್ಥಿಗಳನ್ನು ಗೋಪ್ಯವಾಗಿ ವಿಚಾರಣೆ ನಡೆಸಿದ್ದೇವೆ. ಗ್ರಾಮಸ್ಥರಿಂದ ಮಾಹಿತಿ ಸಹ ಪಡೆದಿದ್ದೇವೆ. ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರಕುಮಾರ್ ತಿಳಿಸಿದರು.
ಶಿಕ್ಷಕಿಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪೋಷಕರು ಹಾಗೂ ಗ್ರಾಮಸ್ಥರು, ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಂಡು, ಶಾಲೆಗೆ ಬೇರೆ ಶಿಕ್ಷಕಿಯನ್ನು ನಿಯೋಜಿಸುವಂತೆ ಮನವಿ ಮಾಡಿದರು.
ಮಕ್ಕಳಿಂದ ಶಾಲೆಗಳ ಶೌಚಾಲಯ ಸ್ವಚ್ಛ ಮಾಡಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆದರೂ ಇಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಾಗಿದೆ ಎಂದು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.