ಶಿಡ್ಲಘಟ್ಟ: ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನ ಕದಿಯುತ್ತಿದ್ದ ಯುವಕರಿಬ್ಬರನ್ನು ನಗರ ಠಾಣೆಯ ಪೊಲೀಸರು ಸೋಮವಾರಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹ 4.70 ಲಕ್ಷ ಮೌಲ್ಯದ ಐದು ಬೈಕ್ ವಶಪಡಿಸಿಕೊಳ್ಳಲಾಗಿದೆ.
ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿಯ ಕುಶಾಂತ್ ಹಾಗೂ ಚಿಕ್ಕಬಳ್ಳಾಪುರ ತಾಲ್ಲೂಕಿನ ನೆಲಮಾಕನಹಳ್ಳಿಯ ಸಾಗರ್ ಬಂಧಿತರು. ಮತ್ತೊಬ್ಬ ಆರೋಪಿ ಬೆಂಗಳೂರಿನ ನಾಗರಬಾವಿಯ ಮದನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ನಗರದ ಜೌಗುಪೇಟೆಯ ನಿವಾಸಿ ಎಸ್. ರಾಕೇಶ್ ಎಂಬುವವರು ಮನೆಯ ಮುಂಭಾಗ ನಿಲ್ಲಿಸಿದ್ದ ಕೆಟಿಎಂ ಬೈಕ್ ಕಳುವಾದ ಬಗ್ಗೆ ನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಕೆ. ಸತೀಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.