ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಂರಕ್ಷಣೆಗೆ ಮೊದಲ ಆದ್ಯತೆ: ಮನದಾಳ ಬಿಚ್ಚಿಟ್ಟ ನೂತನ ಡಿಸಿ ಆರ್.ಲತಾ

Last Updated 31 ಆಗಸ್ಟ್ 2019, 12:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಬರದಿಂದ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರಿನ ಸಮಸ್ಯೆ ತಲೆದೋರುವುದನ್ನು ತಪ್ಪಿಸಲು ನೀರಿನ ಸಂರಕ್ಷಣೆಗೆ ಹೆಚ್ಚು ಒತ್ತು ನೀಡುವ ಕಾರ್ಯಕ್ರಮಗಳಿಗೆ ಮತ್ತಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ’ ಎಂದು ನೂತನ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯವಾಗಿ ನೀರಿನ ಸಮಸ್ಯೆಯನ್ನು ಜಿಲ್ಲಾಡಳಿತ ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ನೀರಿನ ಸಮಸ್ಯೆಯಿಂದ ಪಾರಾಗಲು ಮಳೆ ನೀರಿನ ಸಂಗ್ರಹ ಯೋಜನೆಯನ್ನು ಅನುಷ್ಠಾನಕ್ಕೆ ಈಗಾಗಲೇ ಜಿಲ್ಲಾಡಳಿತ ಮುಂದಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾದ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಮಟ್ಟ ಉತ್ತಮಪಡಿಸಿ ಉನ್ನತ ಸ್ಥಾನಕ್ಕೆ ಏರಿಸಲು ವೈಯುಕ್ತವಾಗಿ ಶ್ರಮಿಸುವ ಅಗತ್ಯವಿದೆ. ಇದಕ್ಕೆ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಬಿಇಒಗಳು, ಶಿಕ್ಷಕರು ಮುಖ್ಯವಾಗಿ ವಿದ್ಯಾರ್ಥಿಗಳು ಸಹಕರಿಸಬೇಕು. ಮಕ್ಕಳ ಅಪೌಷ್ಠಿಕತೆಯ ಬಗ್ಗೆ ಹೆಚ್ಚಿನ ರೀತಿಯ ಗಮನ ಹರಿಸಲಾಗುತ್ತದೆ’ ಎಂದು ಹೇಳಿದರು.

‘ಸರ್ಕಾರ ಪರಿಸರಕ್ಕೆ ಮಾರಕವಾದ ಪಿಒಪಿಯಿಂದ ತಯಾರಿಸಿದ ಮೂರ್ತಿಗಳ ಮೇಲೆ ನಿಷೇಧ ಹೇರಿದೆ. ಆದ್ದರಿಂದ ಈ ಬಾರಿಯ ಗಣೇಶ ಉತ್ಸವದಲ್ಲಿ ಪ್ರತಿಯೊಬ್ಬ ಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನಷ್ಟೇ ಪ್ರತಿಷ್ಠಾಪಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳು ಸ್ನೇಹಿಜೀವಿಯಾಗಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ಇದರಿಂದ ರೈತರಲ್ಲಿ ಆಡಳಿತ ವ್ಯವಸ್ಥೆಯ ಬಗ್ಗೆ ಉತ್ತಮ ಭಾವನೆ ಉಂಟಾಗುತ್ತದೆ. ಅಧಿಕಾರಿಗಳು ಶಿಸ್ತು, ಸಮಯಪ್ರಜ್ಞೆಯಿಂದ ನಡೆದುಕೊಂಡು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗುವುದರಿಂದ ಕೆಲಸ ಕಾರ್ಯಗಳಲ್ಲಿ ವಿಳಂಬ ಎಂಬ ಪ್ರಶ್ನೆಯೇ ಬರುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT