ಗೌರಿಬಿದನೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ನ. 26ರಂದು ಮುಷ್ಕರ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಸಿದ್ದಗಂಗಪ್ಪ ತಿಳಿಸಿದರು.
ನಗರದಲ್ಲಿ ಸಿಐಟಿಯು ವತಿಯಿಂದ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗಿನಿಂದ ದೇಶದಲ್ಲಿ ಅಭದ್ರತೆ ಕಾಡುತ್ತಿದೆ. ಕಾರ್ಮಿಕರು ಹಾಗೂ ರೈತರು ಬದುಕು ಮೂರಾಬಟ್ಟೆಯಾಗಿದೆ. ದೇಶದಲ್ಲಿ ಲಾಕ್ಡೌನ್ ನಿಯಮ ಜಾರಿಗೆ ತಂದ ಪರಿಣಾಮ ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲವಾಗಿದೆ. ಕಾರ್ಮಿಕರಿಗೆ ಹಾಗೂ ರೈತರಿಗೆ ಇನ್ನಷ್ಟು ಸಂಕಷ್ಟಕ್ಕೆ ಗುರಿ ಮಾಡಿದ್ದಾರೆ. ₹ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ನೆಪಮಾತ್ರಕ್ಕೆ ಜಾರಿಯಾಗಿದ್ದು, ಇದರಿಂದ ಯಾರಿಗೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.
ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು. ಮಕ್ಕಳ ಮತ್ತು ಮಹಿಳೆಯ ಆಹಾರ, ಆರೋಗ್ಯ ಮತ್ತು ಶಿಕ್ಷಣ ಉಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಕಡ್ಡಾಯಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ವೆಂಕಟಲಕ್ಷ್ಮಮ್ಮ ಆಗ್ರಹಿಸಿದರು.
ಅಂಗನವಾಡಿ ನೌಕರರ ಸಂಘದ ಪದ್ಮಾವತಿಬಾಯಿ, ರಾಧಮ್ಮ, ನರಸಮ್ಮ, ಹೇಮಲತಾ, ತಿಪ್ಪಣ್ಣ, ಸಾರಿಗೆ ನೌಕರರ ಸಂಘದ ಲಕ್ಷ್ಮೀನಾರಾಯಣ್ ಇದ್ದರು.