ಗೌರಿಬಿದನೂರು: ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಕಗ್ಗೊಲೆ ಮಾಡಿದಂತಾಗಿದೆ ಎಂದು ಕೃಷಿ ಕೂಲಿ ಕಾರ್ಮಿಕರ ಸಂಘಟನೆ ತಾಲ್ಲೂಕು ಘಟಕ ಅಧ್ಯಕ್ಷ ಸಿ.ಸಿ.ಅಶ್ವತ್ಥಪ್ಪ ಹಾಗೂ ಸಾಮಾಜಿಕ ಕಾರ್ಯಕರ್ತ ಆನೂಡಿ ನಾಗರಾಜ್ ಖಂಡಿಸಿದ್ದಾರೆ.
ಇರುವ ವಿಷಯವನ್ನು ಮುಕ್ತವಾಗಿ ಮಾತನಾಡುವುದು ತಪ್ಪಾ? ಸಾಹಿತಿಯಾದವರನ್ನ ಈ ರೀತಿ ಹತ್ಯೆ ಮಾಡಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಇದೆಲ್ಲಾ ನೋಡಿದರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.