ಚಿಕ್ಕಬಳ್ಳಾಪುರ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಫಲಿತಾಂಶ ಬಂದಿದ್ದು, ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಬಹುಮತ ಗಳಿಸಲಿದೆ ಎಂದು ಬಿಜೆಪಿ ಮುಖಂಡ ಅಗಲಗುರ್ಕಿ ಚಂದ್ರಶೇಖರ್ ತಿಳಿಸಿದರು.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಭಾನುವಾರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸೇರಿ ವಿಜಯೋತ್ಸವ ಆಚರಿಸಿದ ಸಂದರ್ಭ ಅವರು ಮಾತನಾಡಿದರು. ಬಿಜೆಪಿ ಮುಖಂಡರಾದ ತಮ್ಮೇಶ್ಗೌಡ, ಶ್ರೀನಿವಾಸರೆಡ್ಡಿ, ಲಕ್ಷ್ಮಿನಾರಾಯಣ ಗುಪ್ತಾ ಮುಂತಾದವರು ವಿಜಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ವಿಜಯೋತ್ಸವ
ಶಿಡ್ಲಘಟ್ಟ: ಬಿಜೆಪಿ ಕಾರ್ಯಕರ್ತರು ಭಾನುವಾರ ಪಟ್ಟಣದ ಕೋಟೆ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ದೆಹಲಿ, ರಾಜಾಸ್ತಾನ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗಿದೆ. ಛತ್ತೀಸ್ಗಢದಲ್ಲೂ ಹೆಚ್ಚು ಸ್ಥಾನ ಪಡೆಯಲು ಬಿಜೆಪಿ ಸಫಲವಾಗಿದ್ದು ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಸುರೇಂದ್ರಗೌಡ ತಿಳಿಸಿದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಯಿರಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಶ್ರೀಧರ್, ದಾಮೋದರ್, ಖಂಡೇರಾವ್, ತ್ಯಾಗರಾಜ್, ಮುನಿರತ್ನಮ್ಮ, ರತ್ಮಮ್ಮ ಮತ್ತಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.
ಲೋಕಸಭೆ ದಿಕ್ಸೂಚಿ
ಗೌರಿಬಿದನೂರು: ನವದೆಹಲಿ, ರಾಜಸ್ತಾನ, ಛತ್ತೀಸ್ಗಡ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದರೆ ಮಾತ್ರ ದೇಶಕ್ಕೆ ಭವಿಷ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಆರ್.ನರಸಿಂಹಮೂರ್ತಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಗೋಪಿನಾಥ್, ಸಣ್ಣಕ್ಕಿ ವೆಂಕಟರವಣಪ್ಪ, ಕೋಚಿಮುಲ್ ನಿರ್ದೇಶಕ ರಮೇಶ್, ಪುರಸಭೆ ಸದಸ್ಯ ಮೋಹನ್, ಗೋವಿಂದರಾಜು, ಸೊಸೈಟಿ ರಾಮಾಂಜಿ, ನಾಗರಾಜರೆಡ್ಡಿ, ಜಯಲಕ್ಷ್ಮಮ್ಮ, ಮುನಿಲಕ್ಷ್ಮಮ್ಮ, ಶೋಭಾ, ರಮೇಶ್ ರಾವ್, ಜಯಣ್ಣ ಪಾಲ್ಗೊಂಡಿದ್ದರು.