ಅಜ್ಜಂಪುರ: ‘ಅಜ್ಜಂಪುರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಬಾಳೆಹೊನ್ನೂರಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಶ್ರಮಿಸಿದವರಿಗೆ ಅಭಿನಂದನೆ ಮತ್ತು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಪಟ್ಟಣದ ಕೈಲಾಸಂ ಕಲಾಕ್ಷೇತ್ರದಲ್ಲಿ ಶನಿವಾರ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ‘ಮಾರ್ಚ್ 28 ಮತ್ತು 29ರಂದು ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸಮ್ಮೇಳನ ನಡೆಸಲಾಗುವುದು. ಸಮ್ಮೇಳನಾಧ್ಯಕ್ಷರ ಆಯ್ಕೆಯನ್ನು ಕಾರ್ಯಕಾರಿ ಮಂಡಳಿಯಲ್ಲಿ ಅಂತಿಮಗೊಳಿಸಲಾಗುವುದು’ ಎಂದರು.
ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ‘ಸಮ್ಮೇಳನ ಯಶಸ್ಸಿಗೆ ಸ್ಥಳೀಯರು ಹೆಚ್ಚಿನ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.
ಸಾಹಿತ್ಯ ಸಮ್ಮೇಳನ ಸಂದರ್ಭ ‘ಶಿವಕಲಾಮೃತ’ ಸ್ಮರಣ ಸಂಚಿಕೆ ಹೊರತರಲಾಗುವುದು. ಜಿಲ್ಲೆಯ ಲೇಖಕರು ತಕ್ಷಣ ಲೇಖನ ಕಳಿಸಬೇಕು ಎಂದು ಮನವಿ ಮಾಡಿದರು.
ಸಮ್ಮೇಳನಕ್ಕೆ ವಿವಿಧ ಸ್ವಾಗತ ಸಮಿತಿ ರಚಿಸಲಾಯಿತು. ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಶಿವಮೂರ್ತಿ, ಕಲಾವಿದ ಮಾಳೇನಹಳ್ಳಿ ಬಸಪ್ಪ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಚ್. ರಾಜಣ್ಣ ಮಾತನಾಡಿದರು.
ಮುಖಂಡ ಎ.ಸಿ. ಚಂದ್ರಪ್ಪ, ಕನ್ನಡಶ್ರೀ ಭಗವಾನ್, ಇಮ್ರಾನ್, ಜಾನಪದ ಅಕಾಡೆಮಿ ಸದಸ್ಯೆ ಮುಗಳಿ ಲಕ್ಷಿ ದೇವಮ್ಮ, ಜಿಲ್ಲಾ ಕಸಾಪ ಪದಾಧಿಕಾರಿ ಎಸ್.ಎಸ್. ವೆಂಕಟೇಶ್, ಜಿ. ಬಿ. ಪವನ್, ಎಸ್. ಪರಮೇಶ್, ರವಿ ದಳವಾಯಿ ಇದ್ದರು.