ಅಷ್ಟರಲ್ಲಿ ವಿಷಯ ತಿಳಿದು ಹಲವು ವಕೀಲರು ಠಾಣೆಯ ಎದುರು ಜಮಾಯಿಸಿದರು. ಬಳಿಕ ಪ್ರೀತಂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅವರ ಎದೆ, ಕೈ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದ್ದು, ಇದು ವಕೀಲರ ಸಮೂಹವನ್ನು ಇನ್ನಷ್ಟು ಕೆರಳುವಂತೆ ಮಾಡಿತು.
ರಾತ್ರಿಯಿಡಿ ಠಾಣೆಯ ಎದುರು ಧರಣಿ ನಡೆಸಿ, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸ್ ಹಿರಿಯ ಅಧಿಕಾರಿಗಳು ವಕೀಲರನ್ನು ಸಮಾಧಾನಪಡಿಸಲು ಯತ್ನಿಸಿದರು.
‘ಠಾಣೆಯ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
ಈ ನಡುವೆ ಪೊಲೀಸರ ಕೃತ್ಯ ಖಂಡಿಸಿ ವಕೀಲರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜಿಲ್ಲೆಯಲ್ಲದೆ ಹೊರ ಜಿಲ್ಲೆಗಳಿಂದಲೂ ನೂರಾರು ವಕೀಲರು ಚಿಕ್ಕಮಗಳೂರಿಗೆ ಬರುತ್ತಿದ್ದಾರೆ. ವಕೀಲರ ಸಂಘದಲ್ಲಿ ತುರ್ತು ಸಭೆ ನಡೆಸಿದ್ದು, ಆರೋಪಿತ ಪೊಲೀಸರನ್ನು ಬಂಧಿಸುವ ತನಕ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುವ ಮುನ್ಸೂಚನೆಯಿಂದ ನಗರದಲ್ಲಿ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.