ನರಸಿಂಹರಾಜಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಘಟಕದ ವತಿಯಿಂದ ಇದೇ 13ರಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಯೊಂದಿಗೆ ಬಿ.ಎಚ್.ಕೈಮರದಿಂದ ಕುದುರೆಗುಂಡಿವರಗೆ ರಾಷ್ಟ್ರಧ್ವಜ ಹಿಡಿದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಗೇರುಬೈಲು ನಟರಾಜ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ‘ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಕಾಂಗ್ರೆಸ್ ಸಂಭ್ರಮದಿಂದ ಆಚರಿಸುತ್ತಿದೆ. ದೇಶಕ್ಕಾಗಿ ಕಾಂಗ್ರೆಸ್ ನೀಡಿದ ಕೊಡುಗೆಗಳನ್ನೂ ನೆನಪಿಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರ ದೇಶದಾದ್ಯಂತ ಉಚಿತ ಶಿಕ್ಷಣ, ಮಧ್ಯಾಹ್ನದ ಬಿಸಿಯೂಟ, ವಯಸ್ಕರ ಶಿಕ್ಷಣ ಮೂಲಕ ಅಪಾರವಾದ ಬದಲಾವಣೆ ಮಾಡಿದೆ. ನೀರು, ಮನೆ, ರಸ್ತೆ, ವಿದ್ಯುತ್, ಆರೋಗ್ಯ, ಶುಚಿತ್ವ, ಆಹಾರ ಭದ್ರತಾ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.
ಬ್ಯಾಂಕುಗಳನ್ನು ರಾಷ್ಟ್ರೀಕರಣ ಗೊಳಿಸಿ, ದೇಶದ ಪ್ರತಿಯೊಬ್ಬರಿಗೆ ಬ್ಯಾಂಕಿನ ಸೌಲಭ್ಯ ಸಿಗುವಂತಾಯಿತು. ಕೃಷಿಕರಿಗೆ ಮತ್ತು ಬಡವರಿಗೆ ಅನುಕೂಲ ವಾಗುವ ವಿಶೇಷ ಕಾನೂನುಗಳನ್ನು ಜಾರಿಗೊಳಿಸಿದೆ ಎಂದರು.
ಈಗಿನ ಬಿಜೆಪಿ ಸರ್ಕಾರ ಜಾರಿಗೊಳಿಸುತ್ತಿರುವ ಕಸ್ತೂರಿ ರಂಗನ್ ಯೋಜನೆಗಳ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುವುದು ಅನಿವಾರ್ಯವಾಗಿದೆ. ಬಿಪಿಎಲ್ ಕಾರ್ಡ್ ರದ್ದು ಪಡಿಸಿ ದಂಡ ವಸೂಲಿ ಮಾಡುತ್ತಿರುವ ಕ್ರಮವನ್ನು ರಾಜ್ಯ ಸರ್ಕಾರ ತಕ್ಷಣವೇ ಕೈಬಿಡಬೇಕು. ಬಡವರ ಅಂಗವಿಕಲ ಭತ್ಯೆ, ಸಂಧ್ಯಾ ಸುರಕ್ಷಾ ಪಿಂಚಣಿ ಸೌಲಭ್ಯ ತಡೆಹಿಡಿದಿದ್ದು, ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಬಿ.ಎಚ್.ಕೈಮರದಿಂದ ಕುದುರೆಗುಂಡಿಯವರೆಗೆ ನಡೆಯುವ ಕಾಲ್ನಡಿಗೆ ಜಾಥದಲ್ಲಿ ಸುಮಾರು 2ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಪಾಲ್ಗೊಳ್ಳುವರು ಎಂದರು.
ಮುಖಂಡರಾದ ಜುಬೇದಾ, ಬೆನ್ನಿ, ರಾಜೇಂದ್ರ, ಪ್ರಶಾಂತ್ ಶೆಟ್ಟಿ, ಸೈಯದ್ ಸಿಗ್ಬತುಲ್ಲಾ, ರತ್ನಾಕರ, ವಿಜಯ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.