ಚಿಕ್ಕಮಗಳೂರು: ‘ರಾಜ್ಯ ಸರ್ಕಾರವು ದೆಹಲಿಗೆ ನಿಯೋಗ ಒಯ್ದು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಚರ್ಚಿಸಿ ಕ್ರಮ ವಹಿಸುವುದಾಗಿ ಹೇಳಿದೆ. ಹೀಗಾಗಿ 3 ಜಿಲ್ಲೆ ಬಂದ್ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ’ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ (ಕೆಜಿಎಫ್) ಅಧ್ಯಕ್ಷ ಡಾ.ಎಚ್.ಟಿ.ಮೋಹನಕುಮಾರ್ ತಿಳಿಸಿದ್ದಾರೆ.
ಇದೇ 27, 28 ಮತ್ತು 29ರಂದು ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸ್ವಯಂ ಘೋಷಿತ ಬಂದ್ ನಡೆಸಲು ತೀರ್ಮಾನಿಸಲಾಗಿತ್ತು. ರಾಜ್ಯ ಸರ್ಕಾರ ನಿಗಾ ವಹಿಸುವುದಾಗಿ ಹೇಳಿದೆ. ಹೀಗಾಗಿ, ಸರ್ಕಾರದ ನಡೆಯನ್ನು ನೋಡಿಕೊಂಡು ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಕಸ್ತೂರಿರಂಗನ್ ವರದಿ ರೈತರಿಗೆ ಮಾರಕವಾಗಿದೆ. ಉಪಗ್ರಹ ಸಮೀಕ್ಷೆ ನಡೆಸಿ ಗ್ರಾಮಗಳು, ಕೃಷಿ ಜಮೀನುಗಳು ಸೂಕ್ಷ್ಮ ಪರಿಸರ ಪ್ರದೇಶಗಳ ಪಟ್ಟಿಗೆ ಸೇರಿಸಲಾಗಿದೆ. ಭೌತಿಕ ಸಮೀಕ್ಷೆ ನಡೆಸಿ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಪ್ರತಿಭಟನೆಯನ್ನೂ ಮಾಡಿದ್ದೇವೆ. ಆದರೆ, ಸರ್ಕಾರ ಈವರೆಗೆ ಗಮನಹರಿಸಿಲ್ಲ ಎಂದು ದೂರಿದ್ದಾರೆ.