ತರೀಕೆರೆ: ‘14ನೇ ಹಣಕಾಸು ಯೋಜನೆಯ ಅನುದಾನವನ್ನು ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ತಲುಪಿಸುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗ್ರಾಮ ಪಂಚಾಯಿತಿಗಳನ್ನು ಸಶಕ್ತಗೊಳಿಸುವ ಕೆಲಸವನ್ನು ಮಾಡಿದ್ದಾರೆ’ ಎಂದು ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಹೇಳಿದರು.
ಪಟ್ಟಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳಕ್ಕೆ ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾ ಗುವುದು. ವಿಧಾನ ಪರಿಷತ್ ಸದಸ್ಯನಾಗಿ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ನೀಡುವ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದ್ದೇನೆ’ ಎಂದು ಹೇಳಿದರು.
ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ‘ಜಿಲ್ಲೆಯ 195 ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಪರಿಷತ್ ಸದಸ್ಯರಾಗಿದ್ದ ಎಂ.ಕೆ.ಪ್ರಾಣೇಶ್ ಹಾಗೂ ಶಾಸಕ ಸಿ.ಟಿ.ರವಿ ಅವರು ಸಹಕಾರ ನೀಡಿದ್ದಾರೆ. ₹ 1,800 ಕೋಟಿಯ ಜಲಧಾರೆ ಯೋಜನೆ ಜಾರಿಯಾಗಲು ಅನುಮೋದನೆಗೆ ಒಪ್ಪಿಗೆ ಬಾಕಿ ಇದೆ’ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಲ್ಮರುಡಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ 2,438 ಮತದಾರರು ಇದ್ದು, ಇದರಲ್ಲಿ ಪಕ್ಷವನ್ನು ಬೆಂಬಲಿಸುವ 1,437 ಮತದಾರರು ಇದ್ದಾರೆ. ನಾಲ್ಕು ಮಂದಿ ಶಾಸಕರು ಇದ್ದು, ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಉತ್ತಮವಾಗಿ ನಡೆಯುತ್ತಿವೆ. ಸಮಾನ ಆಲೋಚನೆಯ ಜನಪ್ರತಿನಿಧಿಯಾಗಿರುವ ಎಂ.ಕೆ.ಪ್ರಾಣೇಶ್ ಅವರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
ಪಕ್ಷದ ತಾಲ್ಲೂಕು ಅಧ್ಯಕ್ಷ ಅಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೈತ್ರಶ್ರೀ, ಮಾಜಿ ಉಪಾಧ್ಯಕ್ಷ ಕೆ.ಆರ್.ಆನಂದಪ್ಪ, ಮುಖಂಡರಾದ ಪ್ರೇಮ್ ಕುಮಾರ್, ಎಸ್.ಬಿ.ಆನಂದಪ್ಪ, ಟಿ.ಜಿ.ಮಂಜುನಾಥ್, ವಸಂತ್ ಕುಮಾರ್, ತಮ್ಮಯ್ಯ, ಸುದೀಪ್, ರೇಣುಕಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.