ಕೊಪ್ಪ: ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಭಾನುವಾರ ಬಿಜೆಪಿ ಜನ ಸಂಕಲ್ಪ ಸಮಾವೇಶ ನಡೆಯಲಿದ್ದು, ಬೃಹತ್ ವೇದಿಕೆ ಹಾಗೂ ಆಸನದ ವ್ಯವಸ್ಥೆ ಸಿದ್ಧಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾವೇಶಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಆಯಕಟ್ಟಿನ ಪ್ರದೇಶಗಳಲ್ಲಿ ಭಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 3 ಮಂದಿ ಡಿವೈಎಸ್ಪಿ, 11 ಮಂದಿ ಸರ್ಕಲ್ ಇನ್ ಸ್ಪೆಕ್ಟರ್, 41 ಮಂದಿ ಪಿಎಸ್ಐ, 79 ಮಂದಿ ಎಎಸ್ಐ, 166 ಹೆಡ್ ಕಾನ್ ಸ್ಟೆಬಲ್, 347 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ಸಮಾವೇಶದ ಹಿಂದಿನ ದಿನವಾದ ಶನಿವಾರದಂದು ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಎಸ್ಪಿ ಉಮಾ ಪ್ರಶಾಂತ್ ಅವರು ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅವರು ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ರಾಷ್ಟ್ರೀಯ ಕಾಫಿ ಮಂಡಳಿ ಉಪಾಧ್ಯಕ್ಷ ಡಾ. ಜಿ.ಎಸ್.ಮಹಾಬಲ, ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಸ್.ಎನ್.ರಾಮಸ್ವಾಮಿ, ಮಂಡಲ ಬಿಜೆಪಿ ಅಧ್ಯಕ್ಷ ಅದ್ದಡ ಸತೀಶ್ ಮುಂತಾದವರು ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಾರದ ಸಂತೆ ರದ್ದು: ‘ಕ್ರೀಡಾಂಗಣದ ಪಕ್ಕದಲ್ಲಿಯೇ ಸಂತೆ ಮಾರುಕಟ್ಟೆ ಇದೆ. ಮಾರುಕಟ್ಟೆ ರಸ್ತೆಗಳು ಕಿರಿದಾಗಿ
ರುವುದರಿಂದ ಜನ ಜಂಗುಳಿ ತಡೆಯುವ ನಿಟ್ಟಿನಲ್ಲಿ ಭಾನುವಾರ ನಡೆಯಬೇಕಿದ್ದ ವಾರದ ಸಂತೆ ಮುಂದೂಡಲಾಗಿದೆ’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.