ಮೂಡಿಗೆರೆ: ಇಂದಿನ ಕಾಲದಲ್ಲಿ ಆರೋಗ್ಯವಂತ ವ್ಯಕ್ತಿಗಳೇ ನಿಜವಾದ ಶ್ರೀಮಂತರು ಎಂದು ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಪ್ರಿಯಾಂಕಾ ಪ್ರಭಾಕರ್ ಹೇಳಿದರು.
ಪಟ್ಟಣದ ಪಟ್ಟಣ ಪಂಚಾಯಿತಿಯ ಎ.ಬಿ ವಾಜಪೇಯಿ ಸಭಾಂಗಣದಲ್ಲಿ ಜೆಸಿಐ ಸಂಸ್ಥೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. 35 ರಿಂದ 40 ವರ್ಷ ಮೇಲ್ಪಟ್ಟವರು ಕನಿಷ್ಠ 6 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಟ್ಟಣ ಪಂಚಾಯಿತಿ ಸದಸ್ಯ ಕೆ. ವೆಂಕಟೇಶ್ ಮಾತನಾಡಿ, ‘ಪೌರ ಕಾರ್ಮಿಕರು ಹಾಗೂ ಬೀದಿಬದಿ ವ್ಯಾಪಾಸ್ಥರು ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಮಾರಕವಾದ ಕ್ಯಾನ್ಸರ್ ರೋಗದ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಸರ್ಕಾರ ನಿರಂತರವಾಗಿ ಜಾಗೃತಿ ಮೂಡಿಸುತ್ತಿವೆ’ ಎಂದರು.
ಜೆಸಿಐ ಅಧ್ಯಕ್ಷ ಸುಪ್ರಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ದೀಕ್ಷಿತ್ ಕಣಚೂರು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಂದ್ರೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಂಗಸ್ವಾಮಿ ಹಾಗೂ ಜೆಸಿಐ ಪದಾಧಿಕಾರಿಗಳು ಇದ್ದರು.