ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆ ತನಕ 14.7 ಸೆಂ.ಮೀ ಮಳೆ ದಾಖಲಾಗಿದೆ.
ಮಳೆಯ ಜತೆ ಗಾಳಿಯು ಬೀಸುತ್ತಿದ್ದು, ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದುದರಿಂದ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಸ್ಥಳೀಯರು, ಆಂಬುಲೆನ್ಸ್ ಚಾಲಕರು, ಇತರ ವಾಹನ ಚಾಲಕರ ಸಹಾಯದಿಂದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಚಾಲಕರು ಪರದಾಡಿದರು.
ಬಣಕಲ್ ಸಂತೆಯ ಬಳಿ ಮಳೆಗೆ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಆತಂಕ ಸೃಷ್ಟಿಯಾಗಿತ್ತು. ಆದರೆ, ಯಾವುದೇ ಅಪಾಯವಾಗಿಲ್ಲ.
ಚಾರ್ಮಾಡಿ ಘಾಟಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಕಾರು ಜಖಂಗೊಂಡಿವೆ. ಬಣಕಲ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿದ್ದು ಯಾವುದೇ ಆಪಾಯ ಸಂಭವಿಸಿಲ್ಲ. ಇನ್ನು ಹಲವು ತೋಟಗಳಲ್ಲಿ ಮರಗಳು ಉರುಳಿವೆ. ಅತಿಯಾದ ಮಳೆಯಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ.