ನರಸಿಂಹರಾಜಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಸ್ತೆಯ ಡಾಂಬರೀಕರಣ ಹಾಗೂ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಅನುದಾನ ಮೀಸಲಾಗಿಟ್ಟಿದ್ದು, ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ 2021–22ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ರೆಡ್ಕ್ರಾಸ್, ರೇಂಜರ್ಸ್ಸ್ ಮತ್ತು ರೋವರ್ಸ್ಸ್ ಹಾಗೂ ವಿವಿಧ ವೇದಿಕೆಗಳ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾಲೇಜು ಆವರಣದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಹೊಸ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಶ್ರೀನಿವಾಸ್ ₹ 10 ಲಕ್ಷ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಿಸಿದ್ದಾರೆ. ₹ 5ಲಕ್ಷ ವೆಚ್ಚದಲ್ಲಿ ಬಸ್ ತಂಗುದಾಣ ನಿರ್ಮಿಸಲಾಗಿದೆ. ₹ 5ಲಕ್ಷ ವೆಚ್ಚದಲ್ಲಿ ಕಾಲೇಜು ಆವರಣ ಸ್ವಚ್ಛಗೊಳಿಸಲಾಗಿದೆ. ಪಟ್ಟಣ ಪಂಚಾಯಿತಿ ವತಿಯಿಂದ ಮಳೆ ನೀರು ಸಂಗ್ರಹ ಅಳವಡಿಕೆಗೆ ₹ 3ಲಕ್ಷ ವೆಚ್ಚ ಮಾಡಲಾಗಿದೆ ಎಂದರು.
ಎರಡು ವರ್ಷಗಳಲ್ಲಿ ಕೋವಿಡ್ನಿಂದಾಗಿ ಶಿಕ್ಷಣ, ಸಾಂಸ್ಕೃತಿಕ ಚಟುವಟಿಕೆ ಕೈಗೊಳ್ಳಲು ಸಾಕಷ್ಟು ಸಮಸ್ಯೆಯಾಗಿತ್ತು. ಪ್ರಸ್ತುತ ಇದು ಸುಧಾರಣೆಯ ಹಂತ ತಲುಪಿರುವುದು ಸಂತಸ ತಂದಿದೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಮಾತನಾಡಿ, ಕಾಲೇಜು ಸುಂದರವಾದ ಪರಿಸರ ಹೊಂದಿದ್ದು, 10 ಎಕರೆ ವಿಸ್ತಾರವಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಗೊಂದು ವಿಶ್ವವಿದ್ಯಾಲಯವಾದರೆ ಈ ಕಾಲೇಜನ್ನು ಪರಿಗಣಿಸಬೇಕು ಎಂದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಕೆ.ಉಮೇಶ್ ವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ, ವಿವಿಧ ವೇದಿಕೆಗಳ ಸಂಚಾಲಕರಾದ ನಾಗೇಶ್ ಗೌಡ, ಡಾ.ಸೈಯದ್ ನಿಜಾಮುದ್ದೀನ್, ಡಾ.ಅಣ್ಣಪ್ಪ ಮಳೀಮಠ್, ಡಾ.ಜಿ.ಪಿ.ಚಂದ್ರಶೇಖರ್, ಡಾ.ಲಕ್ಷ್ಮಣ ನಾಯ್ಕ ಇದ್ದರು.