ಚಿಕ್ಕಮಗಳೂರು: ತಾಲ್ಲೂಕಿನ ಕಂಚೇನಹಳ್ಳಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ತಮಿಳುನಾಡಿನ ತಿರುವಣ್ಣಾಮಲೈ ಸಮೀಪದ ವೀರಶೋಲಾಪುರಂ ಗ್ರಾಮದ ಶೀಧರ್ (68) ಮೃತ ಕೂಲಿ ಕಾರ್ಮಿಕ. 30 ವರ್ಷಗಳಿಂದ ಜಿಲ್ಲೆಯಲ್ಲೇ ನೆಲೆಸಿರುವ ಶೀಧರ್ ಕುಟುಂಬ, ಕಂಚೇನಹಳ್ಳಿಯಲ್ಲಿ ವಾಸಸಿತ್ತು.
ಮಹೇಶ್ ಎಂಬುವರ ತೋಟದಲ್ಲಿ ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರು. ದಿಢೀರ್ ಬಂದ ಒಂಟಿ ಸಲಗ, ಕಾರ್ಮಿಕನ ಮೇಲೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
ಒಂಟಿ ಕಾಡಾನೆ ಈ ಭಾಗದಲ್ಲಿ ಸುತ್ತಾಡುತ್ತಿದ್ದು, ಸಲಗವನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂಬುದು ಸ್ಥಳೀಯರ ಒತ್ತಾಯ.