ಚಿಕ್ಕಮಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಕಾಂಗ್ರೆಸ್ ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಲಹೆ ನೀಡಿದರು.
ನಗರದ ಜಿಲ್ಲಾಕಾಂಗ್ರೆಸ್ ಕಚೇರಿಗೆ ಇತ್ತೀಚೆಗೆ ಬೇಟಿ ನೀಡಿ ಅವರು ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಾಗಿದೆ. ಆ ಸೋಲಿನ ನಡುವೆಯೂ ಪಕ್ಷದ ಮುಖಂಡರು, ಕಾರ್ಯಕರ್ತರು ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಗಳಲ್ಲಿ ಕಾಂಗ್ರೆಸ್ ಗೆ ಜನ ಮನ್ನಣೆ ದೊರೆತಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಪಟ್ಟಣ ಪಂಚಾಯಿತಿಗಳಲ್ಲಿ ಪಕ್ಷ ಉತ್ತಮ ಪ್ರದರ್ಶನ ತೋರಿದೆ. ಕೊಪ್ಪ ಮತ್ತು ಮೂಡಿಗೆರೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ ಎಂದರು.
ಕಡೂರು ಪುರಸಭೆಯಲ್ಲಿ ಕಾಂಗ್ರೆಸ್ 7 ಸ್ಥಾನ ಪಡೆದಿದೆ. ಜೆಡಿಎಸ್ 6 ಸ್ಥಾನ ಗಳಿಸಿದೆ. ಮೈತ್ರಿ ಮಾಡಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಸ್ಥಳೀಯ ಮುಖಂಡರು ಪ್ರಸ್ತಾಪಿಸಿದ್ದಾರೆ ಎಂದರು.
ಮಾಜಿ ಸಚಿವ ಸಗೀರ್ ಅಹಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಸದಸ್ಯ ಕೆ.ಎಂ.ಮಂಜುನಾಥ್ , ಮುಖಂಡರಾದ ನಿಸಾರ್ ಅಹಮದ್, ರೂಬೆನ್ ಮೊಸೆಸ್, ರೇಖಾಹುಲಿಯಪ್ಪಗೌಡ ಇದ್ದರು.